ಸಿದ್ದಾಪುರ: ನದಿ ದಡದ ನಿವಾಸಿಗಳಿಗೆ ಸರ್ಕಾರ ಸೂಕ್ತ ನಿವೇಶನ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಭರವಸೆ ನೀಡಿದರು.
ನೆಲ್ಯಹುದಿಕೇರಿಯ ಗ್ರಾ.ಪಂ ವ್ಯಾಪ್ತಿಯ ಸಂತ್ರಸ್ತರು ತಮಗೆ ಶಾಶ್ವತ ಪರಿಹಾರವನ್ನು ಒದಗಿಸಬೇಕೆಂದು ಕೋರಿ ಆ.26ರಂದು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ‘ನದಿ ದಡವು ಅಪಾಯವಾಗಿದೆ. ನದಿ ದಡದಲ್ಲಿ ಮನೆಗಳನ್ನು ಕಟ್ಟಬಾರದು’ ಎಂದು ಮನವಿ ಮಾಡಿದರು. ನಿರಾಶ್ರಿತರಿಗೆ ಸರ್ಕಾರಿ ಜಾಗವನ್ನು ಗುರುತಿಸಿ ಶೀಘ್ರದಲ್ಲಿ ಶಾಶ್ವತ ಪರಿಹಾರವನ್ನು ರೂಪಿಸಲಾಗುವುದು. ಈಗಾಗಲೇ ಸಂತ್ರಸ್ತರಿಗೆ ಶಾಶ್ವತ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಸರಕಾರ ಮನೆ ಕಳೆದುಕೊಂಡ ಕುಟುಂಬಕ್ಕೆ ₹ 5 ಸಾವಿರ ಬಾಡಿಗೆ ಹಣವನ್ನು ನೀಡುತ್ತಿದ್ದು, ಸಂತ್ರಸ್ತರು ಸದುಪಯೋಗಪಡಿಸಬೇಕು’ ಎಂದರು.
ಉಪವಿಭಾಗಾಧಿಕಾರಿ ಜವರೇಗೌಡ, ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಗೋವಿಂದರಾಜು, ಕಂದಾಯ ಪರಿವೀಕ್ಷಕ ಮಧುಸೂದನ್, ಗ್ರಾಮ ಲೆಕ್ಕಿಗ ಸಂತೋಷ್, ಜಿ.ಪಂ. ಸದಸ್ಯೆ ಸುನೀತಾ ಮಂಜುನಾಥ್, ತಾ.ಪಂ. ಸದಸ್ಯೆ ಸುಹದಾ ಅಶ್ರಫ್, ಗ್ರಾ.ಪಂ ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಸಫಿಯಾ ಸೇರಿದಂತೆ ಇನ್ನಿತರರು ಇದ್ದರು.