ಮಡಿಕೇರಿ: ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲೆಯ ಮುದ್ರಕರು ಮತ್ತು ಪ್ರಕಾಶಕರಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವ್ಯಾಪ್ತಿಯ ಪ್ರಿಂಟರ್ಸ್ ಮತ್ತು ಪಬ್ಲಿಷರ್ಸ್ಗಳ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣಾ ಆಯೋಗವು ಪ್ರಿಂಟಿಂಗ್ ಅವರಿಗೆ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಪೋಸ್ಟರ್, ಬ್ಯಾನರ್ಸ್, ಕರಪತ್ರ ಹಾಗೂ ಜಾಹೀರಾತುಗಳನ್ನು ಮುದ್ರಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಹಾಗೂ ಟಿ.ವಿ ಮತ್ತು ಕೇಬಲ್ ನೆಟ್ವರ್ಕ್ಗಳಲ್ಲಿ ಚುನಾವಣಾ ಜಾಹೀರಾತುಗಳನ್ನು ಪ್ರಸಾರ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಮಟ್ಟದ ಮಾಧ್ಯಮ ನಿರ್ವಹಣಾ ಸಮಿತಿಯು (ಎಂಸಿಎಂಸಿ) ಪ್ರಮಾಣೀಕರಿಸಿದ ನಂತರ ಕರಪತ್ರ, ಭಿತ್ತಿಪತ್ರ, ಬ್ಯಾನರ್ ಹಾಗೂ ಜಾಹೀರಾತುಗಳನ್ನು ಪ್ರಕಟಿಸಬೇಕು, ಮುದ್ರಿಸಬೇಕು ಎಂದು ಅವರು ಸೂಚನೆ ನೀಡಿದರು.
ಯಾವುದೇ ರೀತಿಯ ನಿಂದನಾತ್ಮಕ ಜಾಹೀರಾತು, ಕರಪತ್ರ, ಭಿತ್ತಿಪತ್ರ, ಬ್ಯಾನರ್, ಪೋಸ್ಟರ್ಗಳನ್ನು ಮುದ್ರಿಸದಂತೆ ಕ್ರಮ ಕೈಗೊಳ್ಳಲು ಮುದ್ರಣಾಲಯದ ಮಾಲೀಕರಿಗೆ ನಿರ್ದೇಶನ ನೀಡಿದರು.
ಮುದ್ರಣಾಲಯದ ಮಾಲೀಕರಿಗೆ ಯಾವುದೇ ರೀತಿಯ ಗೊಂದಲಗಳಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳುವಂತೆಯೂ ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯತೀಶ್ ಉಲ್ಲಾಳ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಭಾನ ಎಂ. ಶೇಕ್ ಇದ್ದರು.