ಮಡಿಕೇರಿ: ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಗೆ ನಗರದ ಹೊರ ವಲಯದ ಕ್ಯಾಪಿಟಲ್ ವಿಲೇಜ್ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಭಾನುವಾರ ನಡೆದ 33ನೇ ವರ್ಷದ ಕೊಡವ ನ್ಯಾಷನಲ್ ಡೇ ಮತ್ತು ಭಾರತೀಯ ಸಂವಿಧಾನ ದಿನದ ಆಚರಣೆಯಲ್ಲಿ ಒಕ್ಕೊರಲಿನಿಂದ ಒತ್ತಾಯಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ವಿರಾಟ್ ಹಿಂದೂಸ್ಥಾನ್ ಸಂಘಂನ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ, ‘ಕೊಡವ ನ್ಯಾಷನಲ್ ಕೌನ್ಸಿಲ್ನ ಬಹು ಮುಖ್ಯ ಬೇಡಿಕೆಯಾದ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಈಡೇರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಕುರಿತು ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿ ಹೈಕೋರ್ಟ್ನಲ್ಲಿ ವಿಚಾರಣಾ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.
ಕೊಡವರಿಗೆ ಸಾಂವಿಧಾನಿಕ ಭದ್ರತೆ ಕಲ್ಪಿಸಬೇಕೆಂದು ಸಿಎನ್ಸಿ ಸಂಘಟನೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದೆ. 5 ಹಂತಗಳ ಪಾದಯಾತ್ರೆಯ ಮೂಲಕ ಕೊಡವ ಲ್ಯಾಂಡ್ ಕುರಿತು ಜನಜಾಗೃತಿ ಮೂಡಿಸಿದೆ ಎಂದು ಶ್ಲಾಘಿಸಿದರು.
ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿ, ಡಾರ್ಜಿಲಿಂಗ್ ಗೂರ್ಖಾ ಲ್ಯಾಂಡ್ ಮಾದರಿಯಲ್ಲಿ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯನ್ನು ಪಡೆದೇ ತೀರುವುದಾಗಿ ಪ್ರತಿಜ್ಞೆ ಮಾಡಿದರು.
‘ಕೊಡವರು ಕೊಡಗಿನ ಮೂಲ ನಿವಾಸಿಗಳು. ಈ ಸಮುದಾಯವನ್ನು ನಾಶ ಮಾಡಲು ಹುನ್ನಾರ ನಡೆಸಲಾಗುತ್ತಿದೆ. ಇದನ್ನು ಸಿಎನ್ಸಿ ತನ್ನ ಹೋರಾಟದ ಮೂಲಕ ವಿಫಲಗೊಳಿಸುತ್ತಲೇ ಬಂದಿದೆ. ಕೊಡವರಲ್ಲಿ ಜಾಗೃತಿ ಮೂಡಿಸಲು ನಿರಂತರ ಪಾದಯಾತ್ರೆ ನಡೆಸಿ ಯಶಸ್ಸು ಸಾಧಿಸಲಾಗಿದೆ. ಕೊಡವರಿಗೆ ಕಾವೇರಿ ಮಾತೆ ಭೂಮಿ ನೀಡಿದ್ದೇ ಹೊರತು ಮತ್ಯಾರೋ ಅಲ್ಲ. ನಮ್ಮ ಪೂರ್ವಜರ ಕಾಲದಿಂದಲೇ ಕೊಡವ ಭೂಮಿ ನಮ್ಮದಾಗಿದೆ. ಈ ಭೂಮಿಯನ್ನು ಕಳೆದುಕೊಂಡರೆ ಕೊಡವರಿಗೆ ಭವಿಷ್ಯವಿಲ್ಲ’ ಎಂದು ಎಚ್ಚರಿಕೆ ನೀಡಿದರು.
ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯಿಂದ ಮಾತ್ರ ಕೊಡವ ಬುಡಕಟ್ಟು ಸಮುದಾಯ, ಕೊಡವರ ಸಂಸ್ಕೃತಿ, ಪದ್ಧತಿ, ಪರಂಪರೆ, ಆಚಾರ ವಿಚಾರಗಳು ಉಳಿಯಲು ಸಾಧ್ಯ ಎನ್ನುವುದನ್ನು ಕೊಡವರು ಅರಿತುಕೊಳ್ಳಬೇಕು. ಕೊಡವರು ಬುಡಕಟ್ಟು ಸಮುದಾಯಕ್ಕೆ ಸೇರಿದವರು ಎನ್ನುವ ಅಂಶವನ್ನು ಸಂಶೋಧನೆಗಳೇ ಸಾಬೀತುಪಡಿಸಿವೆ. ಆದ್ದರಿಂದ ಕೊಡವರಿಗೆ ಎಸ್ಟಿ ಟ್ಯಾಗ್ ನೀಡಬೇಕೆಂಬ ಬೇಡಿಕೆ ನ್ಯಾಯಸಮ್ಮತವಾಗಿದೆ ಎಂದು ತಿಳಿಸಿದರು.
ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ವಿಡಿಯೊ ಸಂದೇಶದ ಮೂಲಕ ಶುಭ ಕೋರಿದರು. ಮುಕ್ಕೋಡ್ಲು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ತಂಡದಿಂದ ಕೊಡವ ಸಾಂಪ್ರದಾಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಿಎನ್ಸಿ ಯ 9 ಪ್ರಮುಖ ಬೇಡಿಕೆಗಳ ಪರವಾಗಿ ಅಲ್ಲಿ ಸೇರಿದ್ದವರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಹಲವು ಮುಖಂಡರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಕೊಡವ, ಕೊಡವತಿಯರು ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.