ಶನಿವಾರಸಂತೆ: ‘ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಧಾರ್ಮಿಕ ತಳಹದಿಯ ಜೊತೆಯಲ್ಲಿ ಗ್ರಾಮೀಣ ಭಾಗದ ಮಹಿಳೆಯರ ಸಬಲೀಕರಣ ಹಾಗೂ ಗ್ರಾಮೀಣ ಭಾಗದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದಲ್ಲಿ ಜನಮನ್ನಣೆ ಗಳಿಸಿದೆ’ ಎಂದು ಅಂಕನಹಳ್ಳಿ ತಪೋವನ ಕ್ಷೇತ್ರ ಮನೆಹಳ್ಳಿ ಮಠಾಧೀಶ ಮಹಂತ ಶಿವಲಿಂಗ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ಕೊಡಗು- ಹಾಸನ ಜಿಲ್ಲಾ ಗಡಿಭಾಗದಲ್ಲಿರುವ ಈಚಲಬೀಡು ಗ್ರಾಮದ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್, ಸಾಮೂಹಿಕ ಸತ್ತನಾರಾಯಣ ಪೂಜಾ ಸಮಿತಿ, ಈಚಲಬೀಡು ಪ್ರಗತಿಬಂದು ಸ್ವ-ಸಹಾಯ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ತನಾರಾಯಣ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಬಲರಾಗಿಸುವ ಚಿಂತನೆಯಲ್ಲಿ ಸ್ಥಾಪಿತವಾದ ಸಂಸ್ಥೆಯು ಈಗ ಗ್ರಾಮಾಭಿವೃದ್ದಿ, ಕೃಷಿ, ಆರೋಗ್ಯ, ಪರಿಸರ, ಸ್ವಚ್ಚತೆ ಇನ್ನು ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ದಿ ಪರಿಕಲ್ಪನೆಯಡಿಯಲ್ಲಿ ಸ್ಥಾಪಿಸಿರುವ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕ್ರಮಗಳು ಸರ್ಕಾರದ ಕಾರ್ಯಕ್ರಮಗಳಷ್ಟೆ ಪ್ರಸಿದ್ದಿ ಪಡೆದಿದ್ದು, ಈ ನಿಟ್ಟಿನಲ್ಲಿ ಎಲ್ಲಾರೂ ಗ್ರಾಮಾಭಿವೃದ್ದಿಯ ಯೋಜನೆಯ ಪ್ರಗತಿಗಾಗಿ ಕೈಜೋಡಿಸುವಂತೆ ಮನವಿ ಮಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟಿನ ಮೈಸೂರು ನಿರ್ದೇಶಕ ಬಿ.ಜಯರಾಮ್ ನೆಲ್ಲಿತಾಯ ಮಾತನಾಡಿ, ‘ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸದೃಢತೆ ಗ್ರಾಮಾಭಿವೃದ್ದಿ ಕಲ್ಪನೆಯಲ್ಲಿ 4 ದಶಕಗಳ ಹಿಂದೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯನ್ನು ಸ್ಥಾಪಿಸಿರುವ ಸಂಸ್ಥೆಯು ರಾಜ್ಯ, ದೇಶದಾದ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಯೋಜನೆಯ ಹಲವು ಕಾರ್ಯಕ್ರಮಗಳು, ಸಾಲ ಸೌಲಭ್ಯಗಳನ್ನು ಕೊಡುತ್ತಿರುವ ಮೂಲಕ ಗ್ರಾಮೀಣ ಭಾಗದಲ್ಲಿ ಶೇ 75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿದೆ ಎಂದರು.
ಈಚಲಬೀಡು ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಈ.ಎ.ಮೋಹನ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಎಂ.ನಾಗೇಶ್, ದೊಡ್ಡೇಗೌಡ, ಮಮತಾ, ಯೋಜನಾಧಿಕಾರಿ ಕೆ.ಪುರುಷೋತ್ತಮ್, ಆರ್.ಪಿ.ಲಕ್ಷ್ಮಣ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಸೇವಾ ಪ್ರತಿನಿಧಿಗಳು, ಪೂಜಾ ಸಮಿತಿ ಸದಸ್ಯರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.