ಮಡಿಕೇರಿ: ‘ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಲು ಮಕ್ಕಳ ಹಬ್ಬ ಸಹಕಾರಿ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಲಕ್ಷ್ಮೀಪ್ರಿಯಾ ಹೇಳಿದರು.
ನಗರದ ಸರ್ಕಾರಿ ಮಾದರಿ ಪ್ರಾಧಮಿಕ ಶಾಲೆಯಲ್ಲಿ ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ನಡೆದ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ತಮ್ಮನ್ನು ವಿಜ್ಞಾನ ಕಲಿಕೆಯ ಆಸ್ತಿ ಬೆಳೆಸಿಕೊಳ್ಳುವುದರೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಉತ್ತಮ ವೇದಿಕೆ’ ಎಂದರು.
ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ನ ಉಪಾಧ್ಯಕ್ಷ ಬೇಬಿ ಮ್ಯಾಥ್ಯು, ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರ ಸೇರಿದಂತೆ ತಮ್ಮನ್ನು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಜಿಲ್ಲೆಯ ಮಕ್ಕಳು ರಾಷ್ಟ್ರೀಯ ವಿಜ್ಞಾನಮಟ್ಟದಲ್ಲಿ ಸ್ಪರ್ಧಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿಎಸ್.ಮಚ್ಚಾಡೋ ಅವರು, ‘ಮಗು ತನ್ನ ಬಾಲ್ಯವನ್ನು ಸಂಭ್ರಮಿಸಬೇಕೆಂದರೆ ಕಲಿಕೆಯು ಹಬ್ಬವಾಗಿರಬೇಕು. ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಲು ಮತ್ತು ಸಮುದಾಯದ ಸಹಭಾಗಿತ್ವವನ್ನು ಶೈಕ್ಷಣಿಕ ಕ್ಷೇತ್ರಕ್ಕೆ ಬಳಸಿಕೊಳ್ಳಲು ಸಹಕಾರಿಯಾಗಿದೆ’ ಎಂದು ಹೇಳಿದರು.
ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಎಸ್.ಟಿ.ಜವರೇಗೌಡ ಮಾತನಾಡಿ, ಮಕ್ಕಳು ವಿಜ್ಞಾನ ಮಾದರಿ ಆಟಿಕೆಗಳ ಮೂಲಕ ಕಲಿಯಲು ಉತ್ತಮ ಅವಕಾಶ ಹೊಂದಿರುತ್ತದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ ಮಾತನಾಡಿ, ವಿಜ್ಞಾನ ಹಬ್ಬವು ವಿಜ್ಞಾನ ಕಲಿಕೆಯ ಕುರಿತು ಮಕ್ಕಳನ್ನು ಪ್ರೇರೇಪಿಸುವ ಕಾರ್ಯಕ್ರಮವಾಗಿದ್ದು, ಮಕ್ಕಳು ವಿಜ್ಞಾನ ಸಂಬಂಧ ಹಾಗೂ ಮೂಢನಂಬಿಕೆಯನ್ನು ಹೋಗಲಾಡಿಸುವಂತಾಗಬೇಕು ಎಂದು ಸಲಹೆ ನೀಡಿದರು.
ಸಂಚಾಲಕಿ ಗಂಗಮ್ಮ, ವೆಂಕಟೇಶ್, ಶ್ರೀಶೈಲ ಬೆಳಗಿ, ಪುಟ್ಟರಂಗನಾಥ್, ವನಜಾಕ್ಷಿ, ಶಿವರಾಮ್, ಸಂಯೋಜಕ ವಿಲ್ಫ್ರೇಡ್ ಕ್ರಾಸ್ತಾ, ಸೋಮಶೇಖರ್ ಶಿಕ್ಷಕರ ಸಂಘದ ಕಾರ್ಯದರ್ಶಿ ಪ್ರಸನ್ನ ಕುಮಾರ್ ಹಾಜರಿದ್ದರು.