ಮಡಿಕೇರಿ: ಶುಕ್ರವಾರದ ದಿನ ಮಡಿಕೇರಿ ನಗರದಲ್ಲಿ ಪ್ರತಿಭಟನೆ, ಪ್ರತಿಭಟನಾ ಮೆರವಣಿಗೆಗೆ ಅನುಮತಿ ನೀಡಬಾರದು ಮತ್ತು ಯಾವುದೇ ದಿನಗಳಲ್ಲಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ಅಥವಾ ರಸ್ತೆ ತಡೆಗಳಿಗೆ ಅವಕಾಶ ನೀಡಬಾರದು ಎಂದು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕಒತ್ತಾಯಿಸಿದೆ
ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಪ್ರತಿಭಟನೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲತೆಗಳ ಬಗ್ಗೆ ಪತ್ರದಲ್ಲಿ ವಿವರಿಸಿದ್ದಾರೆ.
ದೇಶದ ಹೆಮ್ಮೆಯ ವೀರಸೇನಾನಿ, ಕೊಡಗಿನ ಶಿಸ್ತಿನ ಪುತ್ರ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆ ಇರುವ ವೃತ್ತ ಮಡಿಕೇರಿ ನಗರದಲ್ಲಿದೆ. ಇದು ಅತ್ಯಂತ ಗೌರವಯುತ ಪ್ರದೇಶ. ಆದರೆ, ಇತ್ತೀಚಿನ ದಿನಗಳಲ್ಲಿ ಈ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಂದಾಗಿ ಅಗೌರವದ ವಾತಾವರಣ ಸೃಷ್ಟಿಯಾಗುತ್ತಿದೆ. ಕೊಡಗಿನ ಶಿಸ್ತಿನ ವಾತಾವರಣಕ್ಕೆ ಧಕ್ಕೆಯಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೃತ್ತದ ಪಕ್ಕದಲ್ಲೇ ಜಿಲ್ಲಾ ಆಸ್ಪತ್ರೆ ಇದೆ, ಅಲ್ಲದೆ ಮೈಸೂರು, ಮಂಗಳೂರು ಹೆದ್ದಾರಿಯೂ ಹಾದು ಹೋಗುತ್ತದೆ. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ಅಥವಾ ರಸ್ತೆ ತಡೆ ಪ್ರತಿಭಟನೆ ನಡೆಸುವುದರಿಂದ ಆಸ್ಪತ್ರೆಗೆ ರೋಗಿಗಳನ್ನು ಸಕಾಲದಲ್ಲಿ ಕರೆದೊಯ್ಯಲು ಸಾಧ್ಯವಾಗುತ್ತಿಲ್ಲ. ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ನಲ್ಲಿ ಬರುವ ಅಥವಾ ಮೈಸೂರು, ಮಂಗಳೂರು ಆಸ್ಪತ್ರೆಗೆ ತೆರಳುವ ರೋಗಿಗಳು ಗಂಟೆಗಟ್ಟಲೆ ರಸ್ತೆಯಲ್ಲೇ ಬಾಕಿಯಾದ ಉದಾಹರಣೆಗಳಿವೆ ಎಂದು ಅವರು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಡಿಕೇರಿ ನಗರದಲ್ಲಿ ಪ್ರತಿಭಟನೆಗಳು ಮತ್ತು ಪ್ರತಿಭಟನಾ ಮೆರವಣಿಗೆಗಳು ಶುಕ್ರವಾರ ದಿನವೇ ಹೆಚ್ಚಾಗಿ ನಡೆಯುತ್ತಿದೆ. ಶುಕ್ರವಾರ ವಾರದ ಸಂತೆಯ ದಿನವಾಗಿದ್ದು, ಪ್ರತಿಭಟನೆಗಳಿಂದ ಜನಜೀವನಕ್ಕೆ ಅಡಚಣೆಯಾಗುತ್ತಿದೆ. ಗಂಟೆಗಟ್ಟಲೆ ವಾಹನಗಳು ನಿಲುಗಡೆಗೊಳ್ಳುವುದರಿಂದ ಪ್ರಯಾಣಿಕರಿಗೆ ಹಾಗೂ ವ್ಯಾಪಾರಿಗಳಿಗೆ ತೊಂದರೆಯಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರು ಮನವಿ ಸ್ವೀಕರಿಸಿದರು. ಘಟಕದ ಉಪಾಧ್ಯಕ್ಷ ಎಂ.ಎಚ್.ಶೌಕತ್, ಸಂಘಟನಾ ಕಾರ್ಯದರ್ಶಿ ರೆಹಮಾನ್ ಖಾನ್, ಖಜಾಂಚಿ ಎಂ.ಎಚ್.ಅಜೀಜ್, ನಗರ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಎಂ.ಎಂ.ಯಾಕುಬ್, ಸಂಘಟನಾ ಕಾರ್ಯದರ್ಶಿ ಎಂ.ಬಿ.ಕೌಶರ್ ಇದ್ದರು.