ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ; ವಾರದಲ್ಲಿ ಮೂರನೆ ಬಾರಿ ಕಂಪನ

Last Updated 28 ಜೂನ್ 2022, 6:34 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೂಕಂಪನದ ಕೇಂದ್ರ ಬಿಂದು ಕೊಡಗಿನಲ್ಲೆ ಇರುವುದು ಗೊತ್ತಾಗಿದೆ‌.

ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಿಂದ 5.2 ಕಿ.ಮೀ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 15 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕ 3.0ರಷ್ಟು ಭೂಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ‌ ಕೇಂದ್ರ ತಿಳಿಸಿದೆ.

ಈ ಭೂಕಂಪನದಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ, ಹಲವು ಸೆಕೆಂಡ್ ಗಳಷ್ಟು ಸಮಯ ಕಂಪನದ ಅನುಭವವಾಗಿದೆ. ಸುಮಾರು 50 ಕಿ.ಮೀ ಪ್ರದೇಶದವರೆಗೂ ಅನುಭವವಾಗುವ ಸಾಧ್ಯತೆ ಇದೆ. ಆದರೆ, ಈ ಕಂಪನದಿಂದ ಭಯಪಡುವ ಅಗತ್ಯವಿಲ್ಲ. ಹೆಚ್ಚೆಂದರೆ ಮನೆಯಲ್ಲಿರುವ‌ ವಸ್ತುಗಳು ಅಲುಗಾಡಬಹುದು. ಜನತೆ ಗಾಬರಿ ಆಗುವ‌ ಅವಶ್ಯಕತೆಯಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ.

ಈ‌ ಭೂಕಂಪದ ಅನುಭವ ತಮಗೇನಾದರೂ ಆದರೆ ಹಾಗೂ ಭೂಮಿಯಲ್ಲಿ ಬಿರುಕುಗಳು ಕಂಡು ಬಂದರೆ ಕೊಡಗು ಜಿಲ್ಲೆಯ ವಿಪತ್ತು ನಿರ್ವಹಣಾ ಕೇಂದ್ರ 08272-221077, 221099 ಕರೆ ಮಾಡಿ ಮಾಹಿತಿ ಕೊಡಬೇಕೆಂದು ಮನವಿ ಮಾಡಿದೆ‌‌.

ಮಡಿಕೇರಿ, ನಾಪೋಕ್ಲು, ಕುಕ್ಕುಂದ, ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ ಸೇರಿದಂತೆ ವಿವಿಧ ಕಡೆ 7.45 ಕ್ಕೆ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ. ಮನೆಯಲ್ಲಿದ್ದ ಪಾತ್ರೆಗಳು ಅಲುಗಾಡಿವೆ.‌

ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಪರಿಣತ ಅನನ್ಯ ವಾಸುದೇವ್, '5 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಸಾಕಷ್ಟು ಕಡೆಗಳಿಂದ ಜನರು ಮಾಹಿತಿ ನೀಡಿದ್ದಾರೆ. ವಿಷಯವನ್ನು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಗಮನಕ್ಕೆ ತರಲಾಗಿದೆ‌. ರಿಕ್ಟರ್ ಮಾಪಕದಲ್ಲಿ ದಾಖಲಾಗಿರುವ ದತ್ತಾಂಶಗಳ ಪರಿಶೀಲನೆ ನಡೆದಿದೆ. ಆ ಬಳಿಕ ಕಂಪನದ ತೀವ್ರತೆ ಗೊತ್ತಾಗಲಿದೆ. ಸದ್ಯಕ್ಕೆ ಜನರು ಆತಂಕಪಡುವ ಅಗತ್ಯ ಇಲ್ಲ' ಎಂದು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಭೂಮಿ ಕಂಪಿಸುತ್ತಿರುವುದು ವಾರದಲ್ಲಿ ಇದು ಮೂರನೆ ಬಾರಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT