ಸಿದ್ದಾಪುರ: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ದುಬಾರೆ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ನೆಲ್ಯಹುದಿಕೇರಿ, ಅತ್ತಿಮಂಗಲ, ವಾಲ್ನೂರು- ತ್ಯಾಗತ್ತೂರು ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ 20 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ದಾಂಧಲೆ ನಡೆಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ಸುಬ್ರಾಯ ನೇತೃತ್ವದಲ್ಲಿ 15 ಮಂದಿ ಅರಣ್ಯ ಸಿಬ್ಬಂದಿ, ಪಟಾಕಿ ಸಿಡಿಸಿ ಕಾರ್ಯಾಚರಣೆ ನಡೆಸಿ, ಕಾಡಾನೆಗಳ ಹಿಂಡನ್ನು ಅರಣ್ಯಕ್ಕೆ ಅಟ್ಟಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪವಲಯ ಅರಣ್ಯಾಧಿಕಾರಿ ಸುಬ್ರಾಯ, ಕಾಫಿ ತೋಟಗಳಲ್ಲಿ ಕಾರ್ಯಚರಣೆ ನಡೆಸುವ ಸಂದರ್ಭ ನಾಲ್ಕೈದು ಮರಿಯಾನೆಗಳು ಸೇರಿದಂತೆ 20ಕ್ಕೂ ಅಧಿಕ ಕಾಡಾನೆಗಳು ಕಂಡುಬಂದವು. ಕಾಡಾನೆಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ.
ಮುಂದಿನ ದಿನಗಳಲ್ಲಿ ಕೂಡ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಅಟ್ಟಿಸಲು ಕಾರ್ಯಾಚರಣೆ ನಡೆಸಲಾಗುವುದು ಎಂದು ಇದೇ ವೇಳೆ ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚರಣ್ , ರವಿ ಹಾಗೂ ಇತರರು ಪಾಲ್ಗೊಂಡಿದ್ದರು.