ಮಡಿಕೇರಿ: ಮಳೆಗಾಲ ಮುಗಿದಿದ್ದು, ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳತ್ತ ಗಮನ ಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಕಾಮಗಾರಿಗಳ ಪ್ರಗತಿ, ಕೋವಿಡ್-19 ನಿರ್ವಹಣೆ, ಮತ್ತಿತರ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಏಪ್ರಿಲ್, ಮೇವರೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದ್ದು, ಈಗಿನಿಂದಲೇ ಅಭಿವೃದ್ಧಿ ಕಾರ್ಯದತ್ತ ವಿಶೇಷ ಆದ್ಯತೆ ನೀಡಬೇಕು. ಹಾಗೆಯೇ ಸರ್ಕಾರದ ಹಲವು ಯೋಜನೆಗಳನ್ನು ಅರ್ಹರಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು.
2019ರಲ್ಲಿ ಸಂಭವಿಸಿದ ಮಳೆಹಾನಿ ಕಾಮಗಾರಿಗೆ ಸಂಬಂಧಿಸಿದಂತೆ ಕಾಮಗಾರಿ ನಿರ್ವಹಣೆ ಸಂಬಂಧ ಬಿಲ್ಲನ್ನು ಒಂದು ವಾರದೊಳಗೆ ಸಲ್ಲಿಸುವಂತೆ ಅವರು ಸೂಚಿಸಿದರು.
2019ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅಂಗನವಾಡಿ, ಶಾಲಾ ಕಟ್ಟಡಗಳು, ಆಸ್ಪತ್ರೆ, ರಸ್ತೆ, ವಿದ್ಯುತ್ ಕಂಬ... ಹೀಗೆ ಹಲವು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇವುಗಳು ಮೂಲ ಸೌಲಭ್ಯಗಳಲ್ಲಿ ಅತೀ ಮುಖ್ಯವಾಗಿವೆ ಎಂದು ತಿಳಿಸಿದರು.
ಮಳೆಹಾನಿ ಕಾಮಗಾರಿ ಸಂಬಂಧಿಸಿದಂತೆ ಜಿ.ಪಂ ಸಿಇಒ ಅವರು ಮಾಹಿತಿ ತರಿಸಿಕೊಳ್ಳಬೇಕು. ಈ ಬಗ್ಗೆ ಪರಿಶೀಲಿ
ಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಹೇಳಿದರು.
ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ಮಳೆ ಹಾನಿ ಸಂಬಂಧ ಎಂಜಿನಿಯರ್ ಅವರು ಅಂದಾಜು ಪಟ್ಟಿ ಸಲ್ಲಿಸಿ, ಜಿಲ್ಲಾಧಿಕಾರಿ ಅವರಿಂದ ಆಡಳಿತಾತ್ಮಕ ಅನುಮೋದನೆ ದೊರೆತಲ್ಲಿ ಟೆಂಡರ್ ಪ್ರಕ್ರಿಯೆ ಆರಂಭಿಸಬಹುದು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ತಿಳಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ.ಶೇಖ್ ಅವರು ಹೋಬಳಿವಾರು ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ಈಗಾಗಲೇ 97ರಷ್ಟು ಬೆಳೆ ಸಮೀಕ್ಷೆಯಾಗಿದೆ. ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕಸಂಗ್ರಹಿಸಲಾದ ಬೆಳೆ ಮಾಹಿತಿಯನ್ನು ಗ್ರಾಮ ಪಂಚಾಯತ್ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರದರ್ಶಿಸಲಾಗಿದ್ದು, ಈ ಕುರಿತು ರೈತರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ. ರೈತರು ಬೆಳೆ ಮಾಹಿತಿ, ವಿಸ್ತೀರ್ಣದ ಮಾಹಿತಿ ಕುರಿತು ಬೆಳೆ ದರ್ಶಕ್ ಮೊಬೈಲ್ ಆಪ್ ಮೂಲಕ ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ 10 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಅವರು ಮಾಹಿತಿ ನೀಡಿದರು.
ಮಳೆಹಾನಿ ಕಾಮಗಾರಿಗೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಕಾರ್ಯಪಾಲಕ ಎಂಜಿನಿಯರ್ ಶ್ರೀಕಂಠಯ್ಯ ಅವರು ಮಾಹಿತಿ ನೀಡಿದರು.
2019 ರಲ್ಲಿ ಸಂಭವಿಸಿದ ಮಳೆ ಹಾನಿ ಕಾಮಗಾರಿ ಕೈಗೊಳ್ಳಲಾಗಿದ್ದು, ಬಿಲ್ಲು ಸಲ್ಲಿಸಬೇಕಿದೆ ಎಂದರು.
ಕೋವಿಡ್-19 ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಸ್ವಚ್ಛ ಭಾರತ್ ಅಭಿಯಾನ ಯೋಜನೆಯಡಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲಾಗುತ್ತಿದೆ. ಪ್ರತೀ ಗ್ರಾ.ಪಂ.ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಂಬಂಧಿಸಿದಂತೆ ಹೆಚ್ಚಿನ ಗಮನಹರಿಸಲಾಗಿದೆ ಎಂದರು.
ಹೆಚ್ಚುವರಿಜಿಲ್ಲಾಧಿಕಾರಿ ಶ್ರೀನಿವಾಸ್, ತಹಶೀಲ್ದಾರರಾದ ಗೋವಿಂದ ರಾಜು (ಸೋಮವಾರಪೇಟೆ), ಮಹೇಶ್(ಮಡಿಕೇರಿ), ನಂದೀಶ್(ವಿರಾಜಪೇಟೆ), ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪಿ.ಎಸ್.ಮಚ್ಚಾಡೊ, ವಿರಾಜಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್ ನಾನಾ ಇಲಾಖೆ ಅಧಿಕಾರಿಗಳು ಹಲವು ಮಾಹಿತಿ ನೀಡಿದರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.