ಮಡಿಕೇರಿ: ನಗರದಲ್ಲಿ ಪಾರ್ಸಲ್ ಸೇವೆ ನೀಡುತ್ತಿರುವ ಹೋಟೆಲ್ಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳುತ್ತಿಲ್ಲ ಎಂದು ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಸ್ಥಳೀಯರೊಬ್ಬರು ವಾಟ್ಸ್ಆ್ಯಪ್ ಮೂಲಕ ದೂರು ನೀಡಿದ್ದು ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ನಗರದ ವಿವಿಧ ಹೋಟೆಲ್ಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಕೊಡಗು-ಹಾಸನ ವಿಭಾಗದ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಅನಿಲ್ ಧವನ್ ಹಾಗೂ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ದಿಢೀರ್ ದಾಳಿ ನಡೆಸಿ ಎಚ್ಚರಿಕೆ ನೀಡಿದರು.
ಹೋಟೆಲ್ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೋಟೆಲ್ ಮಾಲೀಕರಿಗೆ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನೋಟಿಸ್ ಪ್ರತಿಯನ್ನು ನಗರಸಭೆ ಹಾಗೂ ಜಿಲ್ಲಾಡಳಿತಕ್ಕೆ ನೀಡುವಂತೆ ಜಿಲ್ಲಾಧಿಕಾರಿ ಆದೇಶಿಸಿದರು.
ಅನಿಲ್ ಧವನ್ ಪ್ರತಿಕ್ರಿಯಿಸಿ, ಶುಚಿತ್ವ ಇಲ್ಲದ ಹೋಟೆಲ್ ಮಾಲೀಕರಿಗೆ ನೋಟಿಸ್ ನೀಡಿ ಕಾನೂನಿನಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಡಾ.ಮೋಹನ್ ಮಾತನಾಡಿ, ಬೆಳಿಗ್ಗೆ 6.30ಕ್ಕೆ ಉಸ್ತುವಾರಿ ಸಚಿವರು ಕರೆ ಮಾಡಿ ಸಮಸ್ಯೆ ಬಗ್ಗೆ ತಿಳಿಸಿದ್ದರು. ಈ ಹಿನ್ನೆಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದರು.