ಕುಡಿಯುವ ನೀರು ಸರಬರಾಜು ಮಾಡುವ ನಗರಸಭಾ ಸಿಬ್ಬಂದಿಗೆ ಇಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ಇದು ಅವೈಜ್ಞಾನಿಕ ಕ್ರಮ. ಬಾವಿ ಮತ್ತು ಶೌಚಾಲಯಕ್ಕೆ ಕೇವಲ ನಾಲ್ಕು ಅಡಿಯಷ್ಟು ಅಂತರವಿದೆ. ಶೌಚಾಲಯದ ಕಲುಷಿತ ನೀರು ಬಾವಿಯನ್ನು ಸೇರುವ ಸಾಧ್ಯತೆಯಿದೆ. ಕನ್ನಂಡಬಾಣೆ, ದೇಚೂರು, ಪುಟಾಣಿನಗರ, ರಾಘವೇಂದ್ರ ದೇವಾಲಯ ವ್ಯಾಪ್ತಿ, ಜಿಲ್ಲಾ ಆಸ್ಪತ್ರೆ ಸೇರಿದಂತೆ ನಗರ ವಿವಿಧ ಬಡಾವಣೆಗಳಿಗೆ ಇದೇ ಬಾವಿಯಿಂದ ನೀರು ಸರಬರಾಗುತ್ತಿದೆ. ಕುಡಿಯುವ ನೀರನ್ನು ಪೂರೈಸಲು ಕನ್ನಂಡಬಾಣೆಯಲ್ಲಿ ಇದು ಒಂದೇ ಬಾವಿಯಿದ್ದು, ಅದನ್ನು ಸಂರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಪೀಟರ್ ಮನವಿಯಲ್ಲಿ ತಿಳಿಸಿದ್ದಾರೆ.