ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ತಡರಾತ್ರಿಯಿಂದ ಬಿಡುವು ಕೊಟ್ಟು ಬಿರುಸಿನ ಮಳೆಯಾಗುತ್ತಿದೆ.
ಮಂಗಳವಾರ ಮಧ್ಯಾಹ್ನವೂ ಮಡಿಕೇರಿ, ಅಪ್ಪಂಗಳ, ಕಾಟಕೇರಿ, ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಅರ್ಧ ಗಂಟೆ ಧಾರಾಕಾರ ಮಳೆಯಾಗಿದೆ. ಉತ್ತಮ ಮುಂಗಾರಿನ ನಿರೀಕ್ಷೆಯಲ್ಲಿದ್ದ ರೈತರು ಹರ್ಷಗೊಂಡಿದ್ದಾರೆ.
ಸೋಮವಾರಪೇಟೆ, ಸುಂಟಿಕೊಪ್ಪ, ಶನಿವಾರಸಂತೆ, ಸಿದ್ದಾಪುರ ವ್ಯಾಪ್ತಿಯಲ್ಲೂ ಸಾಧಾರಣ ಮಳೆಯಾಗಿದೆ.ಕೊಡಗು ಜಿಲ್ಲೆಯಾದ್ಯಂತ ಜೂನ್ನಲ್ಲಿ ಮಳೆ ಕೈಕೊಟ್ಟಿದ್ದರ ಪರಿಣಾಮ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕು ಪಡೆಯುವ ಲಕ್ಷಣ ಕಾಣಿಸುತ್ತಿದ್ದು ದಟ್ಟವಾದ ಮೋಡ ಕವಿದ ವಾತಾವರಣವಿದೆ.