ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ ಅವರು ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಕೆ.ರಾಮರಾಜನ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಯ್ಯಪ್ಪ ಅವರನ್ನು ಗುಪ್ತಚರ ವಿಭಾಗದ ಎಸ್.ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
2017ರ ಬ್ಯಾಚಿನ ಐಪಿಎಸ್ ಅಧಿಕಾರಿಯಾದ ಕೆ.ರಾಮರಾಜನ್ ಅವರು ಮೊದಲಿಗೆ ಕಲಬುರಗಿಯಲ್ಲಿ ಪ್ರೊಬೇಷನರಿ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದರು. ಬಳಿಕ ರಾಮನಗರ ಜಿಲ್ಲೆಯ ಚನ್ನಪಟ್ಟದ ಎಎಸ್ಪಿಯಾಗಿ ಕಾರ್ಯನಿರ್ವಹಿಸಿದರು.
ನಂತರ, ಹುಬ್ಬಳ್ಳಿ ಧಾರವಾಡದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದರು. ಸದ್ಯ, ಬೆಂಗಳೂರು ಸಿಟಿಯಲ್ಲಿ ಕಮಾಂಡ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಸೋಮವಾರ ಸಂಜೆ ನಗರಕ್ಕೆ ಬಂದ ಅವರು ಎಂ.ಎ.ಅಯ್ಯಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು. ಬಳಿಕ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಕಾನೂನಿಗೆ ಎಲ್ಲರೂ ಗೌರವ ಕೊಡುವಂತೆ ಮಾಡುವುದು ನನ್ನ ಉದ್ದೇಶ. ಕಾನೂನಿನ ಚೌಕಟ್ಟಿನಲ್ಲಿಯೇ ವರ್ತಿಸಬೇಕು’ ಎಂದರು.