ಕುಶಾಲನಗರ: ಜಾತಿ,ಧರ್ಮಗಳ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸುತ್ತಿರುವ ಬಿಜೆಪಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು
ಹೇಳಿದರು.
ಇಲ್ಲಿನ ರೈತ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಲೋಕಸಭೆ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಸಂಘಟನೆ ಬಹಳ ಮುಖ್ಯ ಎಂದರು. ಐದು ಗ್ಯಾರಂಟಿಗಳಲ್ಲಿ ನಾಲ್ಕು ಜಾರಿಗೆ ತಂದು ಯಶಸ್ವಿಯಾಗಿದೆ ಎಂದರು.
ವಿಧಾನ ಪರಿಷತ್ತು ಸದಸ್ಯ ನಾಗರಾಜು ಯಾದವ್ ಮಾತನಾಡಿ, ಕೇಂದ್ರದಲ್ಲಿ 10 ವರ್ಷ ಅಧಿಕಾರದಲ್ಲಿರುವ ಬಿಜೆಪಿ ನುಡಿದಂತೆ ನಡೆದಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಟೀಕಿಸಲು ಪ್ರಧಾನಿ ಹಾಗೂ ವಿರೋಧ ಪಕ್ಷದ ನಾಯಕರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನೆ ಮಾಡಿದರು.
ಮುಖ್ಯಮಂತ್ರಿಯ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಹುಬ್ಬಳ್ಳಿ ಪ್ರಕರಣ 91ನೇ ಇಸವಿಯಾದು. ಈ ಹಿಂದೆ ಬಿಜೆಪಿ ಸರ್ಕಾರದ ಅವದಿಯಲ್ಲಿ ಏಕೆ ಈ ಪ್ರಕರಣವನ್ನು ಹಿಂಪಡೆಯಲಿಲ್ಲ? ಪ್ರತಿಭಟನೆ ನಡೆಸುವ ಮೂಲಕ ಕೀಳುಮಟ್ಟದ ,ಸುಳ್ಳಿ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು.
ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಕಾಂಗ್ರೆಸ್ ಮೇಲಿನ ಕಾರ್ಯಕರ್ತರ ನಂಬಿಕೆ ಬಹಳ ದೊಡ್ಡದಿದೆ. ಪಕ್ಷಾತೀತವಾಗಿ ಕ್ಷೇತ್ರದ ಸಾರ್ವಜನಿಕರಿಗೆ ಸ್ಪಂದಿಸುವುದು ನನ್ನ ಆದ್ಯ ಕರ್ತವ್ಯ. ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಈಗಾಗಲೆ ಚಾಲನೆಗೊಳಿಸಲಾಗಿದೆ ಎಂದರು
ರಾಜ್ಯ ವಕ್ತಾರ ವಕೀಲ ಎಚ್.ಎಸ್.ಚಂದ್ರಮೌಳಿ ಮಾತನಾಡಿ, ಕೊಡಗು ಜಿಲ್ಲೆಗೊಂದು ಸಚಿವ ಸ್ಥಾನದ ಅಗತ್ಯವಿದೆ ಎಂದರು.
ಡಿಸಿಸಿ ಅಧ್ಯಕ್ಷ ಧರ್ಮಜ ಉತ್ತಪ್ಪ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಲೋಕೇಶ್, ಪ್ರಧಾನ ಕಾರ್ಯದರ್ಶಿ ಕಾಂತರಾಜು, ಕೆಪಿಸಿಸಿ ಸಂಯೋಜಕ ನಟೇಶ್ ಗೌಡ, ಜಿಲ್ಲಾ ಯುವ ಘಟಕ ಅಧ್ಯಕ್ಷ ಮಿಥುನ್ ಹಾನಗಲ್, ಮಹಿಳಾ ಕಾಂಗ್ರೆಸ್ ನ ಸುರಯ್ಯ ಅಬ್ರಾರ್, ಬ್ಲಾಕ್ ಅಧ್ಯಕ್ಷರುಗಳಾದ ವಿ.ಪಿ.ಶಶಿಧರ್, ಸತೀಶ್, ಹಂಸ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪ್ರಮುಖರಾದ ಚಿನ್ನಪ್ಪ, ಟಿ.ಪಿ.ಹಮೀದ್, ಬಿ.ಡಿ.ಅಣ್ಣಯ್ಯ, ತೆನ್ನಿರ ಮೈನಾ, ರಾಜೇಶ್ ಯಲ್ಲಪ್ಪ, ಸುರೇಶ್ ಸೇರಿದಂತೆ ವಿವಿಧ ಮುಂಚೂಣಿ ಘಟಕ, ತಾಲೂಕು ಘಟಕದ ಪ್ರಮುಖರು ಇದ್ದರು.
‘ಶಾಸಕ ಮಂತರ್ ಗೌಡ ಫೋನ್ ಎತ್ತಲ್ಲ..’
ಸುಂಟಿಕೊಪ್ಪ ಹೋಬಳಿಯ ನಾಕೂರು ಶಿರಂಗಾಲ ಅಂದಗೊವೆ ಹೇರೂರು ಭಾಗ ತುಂಬ ಹಿಂದುಳಿದಿದೆ ಎಂದು ಎಂದು ಪಕ್ಷದ ಮುಖಂಡರಾದ ಗೀತಾ ಬಸಪ್ಪ ಅಸಮಾಧಾನ ವ್ಯಕ್ತಪಡಿಸಿದರು. ‘ಈ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ನಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು ಅಂದರೆ ಶಾಸಕ ಮಂತರ್ ಗೌಡ ಅವರು ಫೋನ್ ಸ್ವೀಕರಿಸುವುದಿಲ್ಲ. ಸಂದೇಶ ಕಳುಹಿಸಿದರೂ ಉತ್ತರ ಇಲ್ಲ. ಈ ರೀತಿ ಆದರೆ ನಾವು ಜನರಿಗೆ ಏನು ಹೇಳುವುದು’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.