ಮಡಿಕೇರಿ: ನಗರದ ಜಿಲ್ಲಾ ಕ್ರೀಡಾಂಗಣ ಮತ್ತು ಒಳಾಂಗಣ ಕ್ರೀಡಾಂಗಣದ ಅವ್ಯವಸ್ಥೆ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದರು. ಇಲ್ಲಿನ ಮೂಲ ಸೌಲಭ್ಯದ ಕೊರತೆ ಮತ್ತು ಅವ್ಯವಸ್ಥೆಗಳ ಬಗ್ಗೆ ಕ್ರೀಡಾಭಿಮಾನಿಗಳೊಂದಿಗೆ ಚರ್ಚಿಸಿದರು.
ವೀಣಾ ಅಚ್ಚಯ್ಯ ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಕೋಟಿಗಟ್ಟಲೆ ಹಣ ಖರ್ಚು ಮಾಡಿ ಅವೈಜ್ಞಾನಿಕ ಮತ್ತು ಕಳಪೆ ಗುಣಮಟ್ಟದ ಕ್ರೀಡಾ ವಿಭಾಗಗಳ ಕಟ್ಟಡವನ್ನು ನಿರ್ಮಿಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ನುರಿತ ಕ್ರೀಡಾ ತಜ್ಞರೊಂದಿಗೆ ಚರ್ಚಿಸದೆ ಮತ್ತು ಸಲಹೆ ಪಡೆಯದೆ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕ್ರೀಡಾಂಗಣಗಳ ದುರಸ್ತಿ ಮತ್ತು ನಿರ್ವಹಣೆಗಾಗಿ ಪ್ರತಿವರ್ಷ ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಆದರೆ, ಮತ್ತೆ ಮತ್ತೆ ದುರಸ್ತಿಯ ಕಾರಣಗಳು ಪುನರಾವರ್ತನೆಯಾಗುತ್ತಿದ್ದು, ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಅವ್ಯವಸ್ಥೆಗಳು ಕಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಇಲ್ಲಿ ನಡೆದಿರುವ ಅವೈಜ್ಞಾನಿಕ, ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಮುಂದೆ ಆಗಬೇಕಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಲ್ಲದೆ ವಿಧಾನ ಪರಿಷತ್ನಲ್ಲಿಯೂ ಪ್ರಸ್ತಾಪಿಸುವುದಾಗಿ ವೀಣಾ ಅಚ್ಚಯ್ಯ ಭರವಸೆ ನೀಡಿದರು.