ಮಡಿಕೇರಿ: ಮನುಷ್ಯನ ಬಳಿ ಜೀವಭಿಕ್ಷೆ ಬೇಡುತ್ತಿರುವ ವೃಕ್ಷದೇವತೆ, ಬರಗಾಲವನ್ನು ಆಹ್ವಾನಿಸುತ್ತಿರುವ ಪರಿಸರ ನಾಶ, ಮನುಷ್ಯ ಪರಿಸರವನ್ನು ಹಾಳುಗೆಡಹುತ್ತಿರುವುದು... ಹೀಗೆ ಅನೇಕ ಬಗೆಯ ವೈವಿಧ್ಯಮಯ ಚಿತ್ರಗಳು ಮಕ್ಕಳ ಕುಂಚದಿಂದ ಮೂಡಿ ಬಂದವು.
ಇಲ್ಲಿನ ಎಎಲ್ಜಿ ಕ್ರೆಸೆಂಟ್ ಶಾಲೆಯಲ್ಲಿ ಶನಿವಾರ ವಿಶ್ವ ಪರಿಸರ ದಿನಾಚರಣೆಯ ಪೂರ್ವಭಾವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ 160ಕ್ಕಿಂತಲೂ ಅಧಿಕ ಮಕ್ಕಳು ಭಾಗಿಯಾದರೆ, ಪ್ರಬಂಧ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಇಲ್ಲಿ ಏರ್ಪಡಿಸಲಾಗಿತ್ತು.
ಸ್ಪರ್ಧೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳೊಂದಿಗೆ ಅಂಗನವಾಡಿ ಮಕ್ಕಳು, ಎಲ್.ಕೆ.ಜಿ. ಮತ್ತು ಯು.ಕೆ.ಜಿ.ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಂಡು ಪರಿಸರ ಸಂರಕ್ಷಣೆ ಕುರಿತು ವೈವಿಧ್ಯಮಯ ಚಿತ್ರಗಳನ್ನು ರಚಿಸಿದ್ದು ಗಮನ ಸೆಳೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ‘ನಾವು ಪ್ರಾಕೃತಿಕ ಸಂಪನ್ಮೂಲಗಳನ್ನು ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕಿದೆ’ ಎಂದು ತಿಳಿಸಿದರು.
‘ನಾವು ನೆಲ- ಜಲ, ಅರಣ್ಯ, ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಪ್ರಾಕೃತಿಕ ಸಂಪನ್ಮೂಲ ಸಂರಕ್ಷಣೆಗೆ ಎಲ್ಲರೂ ಪಣ ತೊಡಬೇಕಿದೆ’ ಎಂದರು.
ವಿಶ್ವ ಪರಿಸರ ದಿನಾಚರಣೆಯ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್, ‘ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಗಿಡಮರ, ನೆಲ- ಜಲ, ಪರಿಸರ, ಪ್ರಕೃತಿಯ ಮೇಲೆ ಪ್ರೇಮ ಮೂಡಿಸಿದರೆ ಭವಿಷ್ಯದಲ್ಲಿ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ’ ಎಂದರು. ಜೂನ್ 5 ರಂದು ನಡೆಯಲಿರುವ ಪರಿಸರ ದಿನಾಚರಣೆಯ ರೂಪುರೇಷೆ ಕುರಿತು ಮಾಹಿತಿ ನೀಡಿದರು.
ಪರಿಸರ ಸಂರಕ್ಷಣೆ ಮತ್ತು ಪರಿಸರ ಜಾಗತಿ ಆಂದೋಲನದ ಕುರಿತು ಮಾತನಾಡಿದ ಇಕೋ-ಕ್ಲಬ್ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ‘ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಹೆಚ್ಚು ಸಸಿನೆಟ್ಟು ಬೆಳೆಸುವ ಮೂಲಕ ನೆಲ-ಜಲ ಸಂರಕ್ಷಣೆ, ಜೀವಿ-ವೈವಿಧ್ಯ ಹಾಗೂ ನೀರಿನ ಸಂರಕ್ಷಣೆಯಂತಹ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ದಿಸೆಯಲ್ಲಿ ಶಾಲೆಯಲ್ಲಿ ಪರಿಸರ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು’ ಎಂದರು.
ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಬಿ.ಸಿ.ದೊಡ್ಡೇಗೌಡ ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಹೇಳಿದರು.
ಕ್ರೆಸೆಂಟ್ ಶಾಲೆಯ ಪ್ರಭಾರ ಪ್ರಾಂಶುಪಾಲರಾದ ಸುಲ್ಹತ್, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸಂಸ್ಥೆಯ ಪ್ರಮುಖ ತರಬೇತುದಾರರಾದ ಕೆ.ಯು.ರಂಜಿತ್, ಮೈಥಿಲಿರಾವ್, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಸಿ.ಆರ್.ಪಿ.ಗಳಾದ ಸಿ.ಡಿ. ಶೃತಿಶ್ರೀ, ಕಲ್ಪನ, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಹಲವು ಸಂಸ್ಥೆಗಳಿಂದ ಸಹಕಾರ ನೂರಾರು ವಿದ್ಯಾರ್ಥಿಗಳಿಂದ ಚಿತ್ರ ರಚನೆ ಪರಿಸರ ಉಳಿಸಲು ವಿದ್ಯಾರ್ಥಿಗಳ ಕರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.