ಮಡಿಕೇರಿ: ಯುವ ಸಮುದಾಯದ ಅನಿಸಿಕೆಗಳನ್ನು ಹಾಗೂ ಕಷ್ಟಗಳನ್ನು ಹಿರಿಯರು ಆಲಿಸಬೇಕು. ಕೇವಲ ಅಂಕ ಗಳಿಸುವುದಷ್ಟೇ ಗುರಿಯಾಗಿರಬಾರದು ಎಂದು ಶಾಸಕ ಡಾ.ಮಂತರ್ಗೌಡ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ವತಿಯಿಂದ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ಶುಕ್ರವಾರ ನಡೆದ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಶೇ 55ರಿಂದ 60ರಷ್ಟು ಯುವ ಸಮುದಾಯವಿದೆ. ಇವರ ಯೋಚನೆಯನ್ನು ಗಮನಿಸಬೇಕಿದೆ. ಅಂಕ ಗಳಿಕೆಯ ಜೊತೆಜೊತೆಗೆ ನಮ್ಮ ಸುತ್ತಲಿನ ಪರಿಸರದ ಬಗ್ಗೆ, ಸಾಮಾಜಿಕ ಸಂಕೋಲೆಗಳ ಬಗ್ಗೆ ಚಿಂತಿಸಬೇಕಿದೆ ಎಂದು ಪ್ರತಿಪಾದಿಸಿದರು.
ಸ್ವಾಮಿ ವಿವೇಕಾನಂದ ಅವರ ತತ್ವ ಈ ಕಾಲದಲ್ಲೂ ಮುಖ್ಯವಾಗಿದೆ. ಇಂದಿಗೂ ನಮ್ಮ ದೇಶ ಜಾತಿ ಸಂಕೋಲೆಯಿಂದ ಹೊರಬರಲಾಗಿಲ್ಲ. ಇಂತಹ ಸ್ಥಿತಿಯಲ್ಲಿ ಸ್ವಾಮಿ ವಿವೇಕಾನಂದರ ಚಿಂತನೆಗಳು ಪ್ರಸ್ತುತವಾಗಿವೆ ಎಂದರು.
ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಡಾ.ಕೋರನ ಸರಸ್ವತಿ ಅವರು ಸ್ವಾಮಿ ವಿವೇಕಾನಂದ ಅವರನ್ನು ಕುರಿತು ಮಾತನಾಡಿದರು.
ಶಾಲೆಯ ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.