ಮಡಿಕೇರಿ: ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯೊಂದಿಗೆ ಶಿಸ್ತು ಮತ್ತು ಸ್ವಚ್ಛ ಪರಿಸರಕ್ಕೆ ಆದ್ಯತೆ ನೀಡಬೇಕು ಎಂದು ಪೊನ್ನಂಪೇಟೆ ಅರಣ್ಯ ಕಾಲೇಜಿನ ಡೀನ್ ಸಿ.ಜಿ.ಕುಶಾಲಪ್ಪ ಕೋರಿದರು.
ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಮೂಲಕ ಆರೋಗ್ಯಕರ ವಾತಾವರಣವನ್ನು ಸೃಷ್ಟಿಸಬೇಕು. ಈ ಸ್ವಚ್ಛ ಪರಿಸರದ ಕಾಳಜಿಯನ್ನು ವಿದ್ಯಾರ್ಥಿಗಳೂ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ದೇಶದಲ್ಲೇ ವೀರ ಸೇನಾನಿ ಜನರಲ್ ತಿಮ್ಮಯ್ಯ ಅವರ ಹೆಸರಿನಲ್ಲಿರುವ ಏಕೈಕ ಶಾಲೆ ಇದು. ಶಿಸ್ತನ್ನು ಮೈಗೂಡಿಸಿಕೊಂಡು ಮುಂದೆ ಸಾಗಬೇಕು ಎಂದು ಕೋರಿದರು.
ಸ್ವಚ್ಛತೆಯ ಮಹತ್ವದ ಬಗ್ಗೆ ಶಿಕ್ಷಕರು ಮಕ್ಕಳಿಗೆ ಹೆಚ್ಚು ತಿಳಿ ಹೇಳಬೇಕು. ನಮ್ಮ ಮನೆ, ಶಾಲೆ ಪರಿಸರ ಸ್ವಚ್ಛತೆಗೆ ಒತ್ತು ನೀಡುವ ಮಕ್ಕಳು ಮುಂದಿನ ದಿನಗಳಲ್ಲಿ ಸುಂದರ ಪರಿಸರವನ್ನು ರಕ್ಷಿಸಲು ನೆರವಾಗುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳ ವಿವಿಧ ಸಂಘಗಳನ್ನು ಉದ್ಘಾಟಿಸಲಾಯಿತು. ನೂತನ ವಿದ್ಯಾರ್ಥಿ ನಾಯಕರನ್ನು ಗಣ್ಯರು ಅಭಿನಂದಿಸಿದರು
ಶಾಲಾ ಪ್ರಾಂಶುಪಾಲೆ ಕಲ್ಮಾಡಂಡ ಸರಸ್ವತಿ ಅವರು ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು.
2018–19ನೇ ಸಾಲಿನಲ್ಲಿ ಶೈಕ್ಷಣಿಕ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಎಂ.ಇ. ಚಿಣ್ಣಪ್ಪ, ಸಂಚಾಲಕ ಸಿ.ಡಿ. ಕಾಳಪ್ಪ, ಶಾಲಾ ಆಡಳಿತಾಧಿಕಾರಿ ಎನ್.ಎ.ಪೊನ್ನಮ್ಮ ಉಪಸ್ಥಿತರಿದ್ದರು.