ಮಡಿಕೇರಿ: ಬಿಜೆಪಿಯು ‘ಆಪರೇಷನ್ ಕಮಲ’ದ ಮೂಲಕ ಮೈತ್ರಿ ಸರ್ಕಾರ ಉರುಳಿಸಲು ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಆರೋಪಿಸಿ ನಗರದ ಗಾಂಧಿ ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಗಾಂಧಿ ಮೈದಾನದ ಬಳಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಮಿಷವೊಡ್ಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಚಾರ ಎಸಗಿದ್ದಾರೆ. ಸಂವಿಧಾನದ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ. ಅವರು ವಿರುದ್ಧ ಕ್ರಮ ಆಗಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶಿವು ಮಾದಪ್ಪ ಆಗ್ರಹಿಸಿದರು.
ಕೆಪಿಸಿಸಿ ಉಸ್ತುವಾರಿ ಕಾರ್ಯದರ್ಶಿ ವೆಂಕಪ್ಪಗೌಡ ಮಾತನಾಡಿ, ‘ಬಜೆಟ್ ಮಂಡನೆಯ ವೇಳೆ ಬಿಜೆಪಿ ಶಾಸಕರು ಮಹಾತ್ಮ ಗಾಂಧೀಜಿ ಪ್ರತಿಮೆಯ ಎದುರು ಪ್ರತಿಭಟನೆ ನಡೆಸಿದರು. ಆ ಪ್ರತಿಮೆ ಎದುರು ಪ್ರತಿಭಟಿಸಲು ಅವರಿಗೆ ಯಾವ ನೈತಿಕತೆ ಇದೆ’ ಎಂದು ಪ್ರಶ್ನಿಸಿದರು.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ರಾಜ್ಯಪಾಲರ ಭಾಷಣಕ್ಕೂ ಅಡ್ಡಿ ಪಡಿಸಿರುವ ಕ್ರಮ ಸರಿಯಲ್ಲ. ಬಿಜೆಪಿ ಶಾಸಕರ ನಡೆ ಖಂಡನೀಯ. ರಾಜ್ಯದ ಜನರು ಬಿಜೆಪಿ ಮುಖಂಡರನ್ನು ಕ್ಷಮಿಸುವುದಿಲ್ಲ. ಜನರೇ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್, ನಗರಸಭೆ ಸದಸ್ಯ ಚುಮ್ಮಿ ದೇವಯ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್ ಇದ್ದರು.