ಮಡಿಕೇರಿ: ಜಿಲ್ಲೆಯ ಹೆಚ್ಚಿನ ಕಡೆಗಳಲ್ಲಿ ತೋಟದ ಕಾರ್ಮಿಕರನ್ನು ಸರಕು ಸಾಗಣೆ ವಾಹನಗಳಲ್ಲಿ ಕೆಲಸಕ್ಕೆ ಕರೆದೊಯ್ಯುತ್ತಿರುವುದು ಕಂಡುಬರುತ್ತಿದ್ದು, ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಹೇಳಿದರು.
ನಗರದಲ್ಲಿ ಬುಧವಾರ ಚೇಂಬರ್ ಆಫ್ ಕಾಮರ್ಸ್ ಕಟ್ಟಡದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಆಶ್ರಯದಲ್ಲಿ ಕಾರ್ಮಿಕರ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಮಿಕರನ್ನು ನಿಯಮನುಸಾರವಾಗಿ ಆಟೊ, ಜೀಪ್ನಂತಹ ವಾಹನಗಳಲ್ಲಿ ಕರೆದುಕೊಂಡು ಹೋಗಬೇಕು ಎನ್ನುವ ಕಾನೂನು ಶೀಘ್ರದಲ್ಲೇ ಜಾರಿಗೆ ಬರಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ವಾಹನ ಮಾಲೀಕರಿಗೆ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಕಾರ್ಮಿಕರ ಹಕ್ಕುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಿದ್ಧವಿದೆ. ಈಗಾಗಲೇ ಗ್ರಾಮೀಣ ಪ್ರದೇಶದ ಜನರಿಗೆ ಕಾನೂನಿನ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾನೂನು ಸಾಕ್ಷರತಾ ರಥವು ಜಿಲ್ಲೆಯಾದ್ಯಂತ ಸಂಚರಿಸುತ್ತಿದೆ ಎಂದರು.
ವಕೀಲ ವೈ.ಮನೋಜ್ ಬೋಪಯ್ಯ ಮಾತನಾಡಿ, 14 ವರ್ಷಗಳ ಕೆಳಗಿರುವ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕಾನೂನು ಬಂದಿದ್ದು, ಯಾರನ್ನೂ ದುಡಿಸಿಕೊಳ್ಳುವಂತಿಲ್ಲ. ಕಾರ್ಖಾನೆಯಲ್ಲಿ, ಗಣಿಗಳಲ್ಲಿ ಅಥವಾ ಅಪಾಯಕಾರಿ ಕೆಲಸ ಮಾಡಲು ನೇಮಿಸಬಾರದು. ಮಕ್ಕಳನ್ನು ದುಡಿಮೆಯಲ್ಲಿ ತೊಡಗಿಸಿಕೊಳ್ಳುವ ಮಾಲೀಕರ ವಿರುದ್ಧಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ಅಪ್ರಾಪ್ತ ಮಕ್ಕಳು ಮನೆಕೆಲಸ, ತಮ್ಮದೇ ತೋಟದ ಕೆಲಸ, ಕ್ರೀಡೆ ಹಾಗೂ ಚಿತ್ರರಂಗದಲ್ಲಿ ಕೆಲಸ ಮಾಡಬಹುದು. ಅದರ ಹೊರತಾಗಿ ಹೊಟೇಲ್, ಬಾರ್, ರೆಸ್ಟೋರೆಂಟ್, ಅಂಗಡಿ ಮುಂಗಟ್ಟುಗಳಲ್ಲಿ ಕೆಲಸ ಮಾಡುವಂತಿಲ್ಲ ಎಂದು ಹೇಳಿದರು.
ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಕೊಂಡರೆವಿವಾಹ ಖರ್ಚು, ಮನೆ ಕಟ್ಟಲು ₹ 5 ಲಕ್ಷದವರೆಗೆ ಸಹಾಯಧನ ಮತ್ತಿತರ ಅನುಕೂಲತೆಗಳು ದೊರೆಯುತ್ತದೆ ಎಂದು ಮಾಹಿತಿ ನೀಡಿದರು.
ಸಿಐಟಿಯು ಕಾರ್ಯದರ್ಶಿ ರಮೇಶ್, ಗ್ರಾ.ಪಂ ನೌಕರರ ಸಂಘದ ಅಧ್ಯಕ್ಷ ಭರತ್, ವಕೀಲ ಸಂಘದ ಪದಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.