ಮಡಿಕೇರಿ: ‘ವಿವಿಧ ಇಲಾಖೆಗಳಿಂದ ನಡೆಯುವ ಕಾರ್ಯಕ್ರಮಗಳ ಸಂದರ್ಭದಲ್ಲಿ ಎಚ್ಐವಿ ಅಥವಾ ಏಡ್ಸ್ ಬಗ್ಗೆ ಅರಿವು ಮೂಡಿಸಬೇಕು’ ಎಂದು ಪ್ರಭಾರ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಏಡ್ಸ್ ಬರುವುದಕ್ಕೂ ಮೊದಲು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲೂ ರೋಗ ಹರಡದಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
‘ಏಡ್ಸ್ ನಿಯಂತ್ರಣ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಬೇಕು. ಸಾಕ್ಷ್ಯಾಚಿತ್ರದ ಮೂಲಕ ಜಾಗೃತಿ ಮೂಡಿಸಬೇಕು. ಹೀಗೆ ಹಲವು ಕಾರ್ಯಕ್ರಮಗಳನ್ನು ಪ್ರತಿತಿಂಗಳು ಹಮ್ಮಿಕೊಳ್ಳಬೇಕು’ ಎಂದು ಲಕ್ಷ್ಮಿಪ್ರಿಯ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಮಾತನಾಡಿ, ಏಡ್ಸ್ ನಿಯಂತ್ರಣಕ್ಕೆ ಸಂಬಂಧ ಇಲಾಖೆಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇನ್ನಿತರ ಇಲಾಖೆ ಹಾಗೂ ಸಂಘ–ಸಂಸ್ಥೆಗಳು ನೆರವಾಗುತ್ತಿದೆ. ಹಾಗೆಯೇ ಎಚ್ಐವಿ ಪೀಡಿತರಿಗೆ ವಿವಿಧ ಇಲಾಖೆಗಳಿಂದ ಒದಗಿಸಲಾಗುವ ಸೌಲಭ್ಯಗಳು ಸಕಾಲದಲ್ಲಿ ನೀಡುವ ಪ್ರಯತ್ನ ಆಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ್, ಜಿಲ್ಲೆಯಲ್ಲಿ ಏಪ್ರಿಲ್ನಿಂದ ಡಿಸೆಂಬರ್ ಅಂತ್ಯದವರೆಗೆ 115 ಪ್ರಕರಣಗಳು ಕಂಡುಬಂದಿವೆ ಎಂದು ಮಾಹಿತಿ ನೀಡಿದರು.
ರೋಗ ನಿಯಂತ್ರಣ ಸಂಬಂಧಿಸಿದಂತೆ ರೇಡಿಯೊ ಕಾರ್ಯಕ್ರಮ, ಗೋಡೆ ಬರಹ... ಹೀಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿವರಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ಆನಂದ್, ಜಿಲ್ಲಾ ಆಸ್ಪತ್ರೆಯ ಡಾ.ಮಂಜುನಾಥ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ಎಸ್. ಸದಾಶಿವಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ರಾಧಾ, ಕಾರ್ಯಕ್ರಮ ಅಧಿಕಾರಿ ಮುಮ್ತಾಜ್ ಹಾಜರಿದ್ದರು.