ಮಡಿಕೇರಿ: ಪ್ರಕೃತಿ ವಿಕೋಪದಿಂದ ಕೊಡಗಿನ ರಸ್ತೆಗಳು, ಸೇತುವೆಗಳು, ಕೆರೆ– ಕಟ್ಟೆಗಳು ಕೊಚ್ಚಿ ಹೋಗಿರುವುದರಿಂದ ರಾಜ್ಯ ಸರ್ಕಾರ ಜಿಲ್ಲಾ ಪಂಚಾಯಿತಿಗೆ ₹ 74.54 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಜಲಪ್ರಳಯ ಉಂಟಾಗಿ ಕೊಡಗು ಜಿಲ್ಲೆಯು ಅಕ್ಷರಶಃ ನಲುಗಿ ಹೋಗಿತ್ತು. ಆದ್ದರಿಂದ, ಜಿಲ್ಲೆಯಲ್ಲಿ ಮೊದಲಿನ ಸ್ಥಿತಿಗೆ ತರುವಲ್ಲಿ ವಿಶೇಷ ಗಮನ ಹರಿಸಬೇಕಾಗಿದೆ ಎಂದು ಮನವಿಯಲ್ಲಿ ಕೋರಿದ್ದಾರೆ.
ಜಿಲ್ಲೆಯಲ್ಲಿ ಈಗಾಗಲೇ ಭತ್ತ, ಜೋಳ, ಬೆಳೆದ 11,448 ಹೆಕ್ಟೇರ್ ವ್ಯಾಪ್ತಿಯಲ್ಲಿ ಬೆಳೆ ನಾಶವಾಗಿದೆ. ಈ ಬಗ್ಗೆ ಕಾಫಿ ಬೆಳೆಗಾರರು ಅಂದಾಜು ₹ 94.82 ಕೋಟಿ ಬೆಳೆ ನಷ್ಟ ಇರುವುದರಿಂದ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಕೋರಿದ್ದಾರೆ.
‘ಸಿ’ ಮತ್ತು ‘ಡಿ’ ಜಾಗ ನೀಡಿ: ಜಿಲ್ಲೆಯಲ್ಲಿ 551.43 ಹೆಕ್ಟೇರ್ ಜಮೀನು ಮಹಾ ಮಳೆಗೆ ಕೊಚ್ಚಿ ಹೋಗಿದ್ದು, ಜಮೀನು ಕಳೆದುಕೊಂಡ ರೈತರಿಗೆ ಈಗಾಗಲೇ ‘ಸಿ’ ಮತ್ತು ‘ಡಿ’ ವರ್ಗದ ಜಮೀನನ್ನು ಸರ್ಕಾರ ವಾಪಸ್ ಪಡೆದಿರುವುದರಿಂದ ಇಂತಹ ಜಮೀನನ್ನು ರೈತರಿಗೆ ಹಂಚಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.