ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೊಡಗು ಅಪಾಯದಲ್ಲಿದೆ’ ಎಂದು ವದಂತಿ ಹಬ್ಬಿಸಿದರೆ ಕ್ರಮ ಕೈಗೊಳ್ಳಲು ಆಗ್ರಹ

ಜಿಲ್ಲಾ ಹೊಟೇಲ್, ರೆಸಾರ್ಟ್, ಹೋಂಸ್ಟೇ ಅಸೋಸಿಯೇಷನ್ ಮನವಿ
Last Updated 14 ಮೇ 2019, 12:44 IST
ಅಕ್ಷರ ಗಾತ್ರ

ಮಡಿಕೇರಿ: ‘ಕೊಡಗು ಅಪಾಯದಲ್ಲಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಹೊಟೇಲ್, ರೆಸಾರ್ಟ್, ಹೋಂಸ್ಟೇ ಅಸೋಸಿಯೇಷನ್ ಸಲಹೆಗಾರ ಚಿದ್ವಿಲಾಸ್ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಕಳೆದ ವರ್ಷ ಕೊಡಗಿನಲ್ಲಿ ಸೃಷ್ಟಿಯಾದ ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯ ಪ್ರವಾಸೋದ್ಯಮವು ನೆಲಕಚ್ಚಿತ್ತು. ಜಿಲ್ಲಾಡಳಿತ ಕೂಡ ಪ್ರವಾಸೋದ್ಯಮವನ್ನು ಕೆಲವು ದಿನಗಳ ಮಟ್ಟಿಗೆ ಸ್ಥಗಿತಗೊಳಿಸಿತ್ತು. ಇದೇ ರೀತಿಯ ವಿಕೋಪ ಮತ್ತೆ ಬರಲಿದೆ ಎಂಬ ಸುಳ್ಳು ವದಂತಿಗಳು ಸಾಮಾಜಿಕ ತಾಣಗಳಲ್ಲಿ ಬರುತ್ತಿದ್ದು ಇದರ ವಿರುದ್ಧ ಕ್ರಮ ಆಗಬೇಕು ಎಂದು ಮನವಿ ಮಾಡಿದರು.

ವಿಕೋಪವಾದರೂ ಪ್ರವಾಸೋದ್ಯಮ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಆನೇಕ ಕಾರ್ಯಕ್ರಮ ರೂಪಿಸಿ, ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ. ಆದರೆ, ಸುಳ್ಳು ವದಂತಿಗಳಿಂದ ಪ್ರವಾಸಿಗರಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. ಈಚೆಗೆ ಪ್ರವಾಸಿಗರ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರವಾಸೋದ್ಯಮವನ್ನೇ ನಂಬಿದ ಹೋಟೆಲ್, ಹೋಂಸ್ಟೇ, ವ್ಯಾಪಾರಸ್ಥರಿಗೆ ಕಳೆದ 8 ತಿಂಗಳಿಂದ ಸಮಸ್ಯೆ ಎದುರಾಗಿದೆ. ಪ್ರವಾಸಿಗರ ಸಂಖ್ಯೆ ಹೆಚ್ಚಳ ಸೇರಿದಂತೆ ಕೊಡಗು ಸುರಕ್ಷಿತವಾಗಿದೆ ಎಂಬುದರ ಬಗ್ಗೆ ಜಾಗೃತಗೊಳಿಸಬೇಕು ಎಂದು ಹೇಳಿದರು.

ಉಪಾಧ್ಯಕ್ಷ ಜಾಹೀರ್ ಮಾತನಾಡಿ, ಜಿಲ್ಲೆಯಲ್ಲಿ 1 ಲಕ್ಷಕ್ಕೂ ಹೆಚ್ಚಿನ ಜನರು ಪ್ರವಾಸೋದ್ಯಮ ನಂಬಿ ಜೀವನ ಸಾಗಿಸುತ್ತಿದ್ದು ಸುಳ್ಳು ವದಂತಿಗಳಿಗೆ ಪ್ರವಾಸಿಗರು ಕಿವಿಗೊಡಬಾರದು. ಮಾಂದಲ್‌ಪಟ್ಟಿ, ತಂಡಿಯಂಡಮೋಳ್‌ ಬೆಟ್ಟಕ್ಕೆ ಚಾರಣ ಹಾಗೂ ದುಬಾರೆಯಲ್ಲಿ ರ‍್ಯಾಫ್ಟಿಂಗ್‌ಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.

ಸಂಘದ ನಿರ್ದೇಶಕ ಗಿರೀಶ್ ಮಾತನಾಡಿ, ಹೋಂಸ್ಟೇ ಕಲ್ಪನೆ ಈಗ ಕಂಪನಿ ರೀತಿಯಲ್ಲಿ ಬದಲಾಗುತ್ತಿದೆ. ಪ್ರವಾಸಿಗರನ್ನು ಸೆಳೆಯುವುದಕ್ಕಾಗಿ ಮನೆಗಳನ್ನೇ ಬಾಡಿಗೆ ರೂಪದಲ್ಲಿ ನೀಡುತ್ತಿದ್ದಾರೆ. ಅನಧಿಕೃತ ಹೋಂಸ್ಟೇಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಆಸೀಫ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT