ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಗಮಂಡಲ: ಪೊಲಿಂಕಾನ ಉತ್ಸವ ಆಚರಣೆ

Last Updated 1 ಆಗಸ್ಟ್ 2019, 13:44 IST
ಅಕ್ಷರ ಗಾತ್ರ

ನಾಪೋಕ್ಲು: ಕೊಡಗಿನ ಪುಣ್ಯಕ್ಷೇತ್ರವಾದ ಭಾಗಮಂಡಲದಲ್ಲಿ ಪೊಲಿಂಕಾನ ಉತ್ಸವವನ್ನು ಗುರುವಾರ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು. ಪ್ರತಿವರ್ಷ ತುಂಬಿ ಹರಿದು ಪ್ರವಾಹ ರೂಪಿಣಿಯಾಗುವ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಧನ್ಯವಾದ ಅರ್ಪಿಸುವುದೇ ಈ ಉತ್ಸವದ ವಿಶೇಷತೆ.

ಪ್ರತಿವರ್ಷ ಕರ್ಕಾಟಕ ಅಮವಾಸ್ಯೆಯಂದು ಭಾಗಮಂಡಲದಲ್ಲಿ ಪೊಲಿಂಕಾನ ಉತ್ಸವವನ್ನು ಆಚರಿಸುವುದು ವಾಡಿಕೆ. ತಲಕಾವೇರಿಯಲ್ಲಿ ಹುಟ್ಟುವ ಕಾವೇರಿ ಭಾಗಮಂಡಲದ ವರೆಗೆ ಗುಪ್ತಗಾಮಿನಿಯಾಗಿ ಹರಿದು ತ್ರಿವೇಣಿ ಸಂಗಮದಲ್ಲಿ ಸುಜ್ಯೋತಿ,ಕನ್ನಿಕೆ ನದಿಗಳೊಂದಿಗೆ ಸೇರುವ ಮೂಲಕ ತಮಿಳುನಾಡಿನವರೆಗೆ ಹರಿದರೂ ಪ್ರವಾಹ ಭೀತಿ ಎದುರಾಗುವುದು ಭಾಗಮಂಡದಲ್ಲಿ. ಮಳೆಗಾಲದಲ್ಲಿ ಕಾವೇರಿ ನದಿ ಉಕ್ಕಿ ಹರಿಯದೆ ಸೌಮ್ಯಳಾಗಿ ಹರಿಯುವ ಮೂಲಕ ರೈತಾಪಿ ವರ್ಗಕ್ಕೆ ಒಳಿತನ್ನು ಉಂಟು ಮಾಡಲೆಂದು ಪ್ರಾರ್ಥಿಸುವುದು ಈ ಉತ್ಸವದ ವಿಶೇಷ.

ಭಗಂಡೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ 12ಗಂಟೆಗೆ ಮಹಾಪೂಜೆ ಸಲ್ಲಿಸಲಾಯಿತು. ಅನಂತರ ಪೊಲಿಂಕಾನ ಉತ್ಸವ ಮಂಟಪದೊಂದಿಗೆ ಕಾವೇರಿ ಮಾತೆಗೆ ಕರಿಮಣಿ, ಬಿಚ್ಚೋಲೆ, ಸೀರೆ, ವಸ್ತ್ರ ಮತ್ತು ಕುಂಕುಮ ಬಳೆಗಳನ್ನು ಬೆಳ್ಳಿಯ ತಟ್ಟೆಯಲ್ಲಿಟ್ಟು ಭಕ್ತವೃಂದದ ಸಮ್ಮುಖದಲ್ಲಿ ಪೂಜಿಸಲಾಯಿತು. ಚಂಡೆವಾದ್ಯದೊಂದಿಗೆ ಬಾಳೆದಿಂಡುಗಳಿಂದ ರಚಿಸಲಾದ ಪೊಲಿಂಕಾನ ಮಂಟಪವನ್ನು ಭಗಂಡೇಶ್ವರ ದೇವಾಲಯಕ್ಕೆ ಪ್ರದಕ್ಷಿಣೆ ಹಾಕಿಸಿದ ನಂತರ ತ್ರಿವೇಣಿ ಸಂಗಮದ ಬಳಿ ಸಾಂಪ್ರದಾಯಿಕ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ನಂತರ ನದಿ ನೀರಿನಲ್ಲಿ ಬಾಗಿನದಂತೆ ಬಾಳೆದಿಂಡಿನ ಮಂಟಪವನ್ನು ತೇಲಿಬಿಡಲಾಯಿತು. ತಲೆತಲಾಂತರಗಳಿಂದ ಭಾಗಮಂಡಲದಲ್ಲಿ ಪೊಲಿಂಕಾನ ಉತ್ಸವವನ್ನು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಗುತ್ತಿದೆ.

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ,ಸದಸ್ಯರಾದ ನಿಡ್ಯಮಲೆ ಮೀನಾಕ್ಷಿ ಪ್ರಮುಖರಾದ ಅಣ್ಣಯ್ಯ,ತಕ್ಕರಾದ ಬಳ್ಳಡ್ಕ ಅಪ್ಪಾಜಿ,ಕೋಡಿ ಮೋಟಯ್ಯ,ವ್ಯವಸ್ಥಾಪನಾ ಸಮಿತಿ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕುಮಾರ್, ಪಾರುಪತ್ತೆಗಾರ ಪೊನ್ನಣ್ಣ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.ಪೂಜಾ ಕಾರ್ಯಕ್ರಮ ಅರ್ಚಕ ಹರೀಶ್ ಭಟ್ ಮತ್ತು ಕುಶಭಟ್ ನೇತೃತ್ವದಲ್ಲಿ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT