ಮಡಿಕೇರಿ: ಕೇರಳದ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರಿಬ್ಬರು ಪ್ರವೇಶಿಸಿರುವುದನ್ನು ಖಂಡಿಸಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಅಯ್ಯಪ್ಪಸ್ವಾಮಿ ಭಕ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಮಾನವ ಸರಪಳಿ ನಿರ್ಮಿಸಿದ ಮಾಲಾಧಾರಿಗಳು ಕೇರಳ ಸರ್ಕಾರ ಹಾಗೂ ಮಹಿಳೆಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ಬಿಜೆಪಿ ಜಿಲ್ಲಾ ಘಟಕ ಹಾಗೂ ವಿಶ್ವ ಹಿಂದೂ ಪರಿಷತ್ ಸಹ ಬೆಂಬಲ ಸೂಚಿಸಿತ್ತು.
ಕೋಟೆ ಮಾರಿಯಮ್ಮ ದೇವಾಲಯ ಸಮಿತಿ ಸದಸ್ಯ ಉಮೇಶ್ ಸುಬ್ರಮಣಿ ಮಾತನಾಡಿ, ‘ಮಹಿಳೆಯರು ದೇವಾಲಯ ಪ್ರವೇಶಿಸಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಇದಕ್ಕೆ ಕೇರಳದ ಕಮ್ಯುನಿಸ್ಟ್ ಸರ್ಕಾರ ಬೆಂಬಲ ನೀಡಿದೆ. 800 ವರ್ಷಗಳಿಂದ ನಡೆದು ಬಂದಿರುವ ಸಂಪ್ರದಾಯಗಳಿಗೆ ತಿಲಾಂಜಲಿ ನೀಡಲಾಗಿದೆ. ಇಷ್ಟೆಲ್ಲ ನಡೆಯುತ್ತಿದ್ದರೂ ಕೇರಳದ ಮುಖ್ಯಮಂತ್ರಿ ಮಾತ್ರ ಮೌನ ವಹಿಸಿದ್ದಾರೆ’ ಎಂದು ಅಸಮಾಧಾನ ಹೊರಹಾಕಿದರು.
ಹಿಂದೂ ಸಂಘಟನೆ ಮುಖಂಡ ಕುಕ್ಕೇರ ಅಜಿತ್ ಮಾತನಾಡಿ, ‘ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಕೆಲವು ಸಂಪ್ರದಾಯಗಳಿವೆ. ಆದರೆ, ಅವುಗಳನ್ನು ಮೀರಿ ಮಹಿಳೆಯರು ದೇವಾಲಯ ಪ್ರವೇಶಿಸಿದ್ದು ಖಂಡನೀಯ. ಭಕ್ತರ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವುದು ಭಯ ತಂದಿದೆ’ ಎಂದು ಹೇಳಿದರು.