ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಮವಾರಪೇಟೆ | ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಪ್ರತಿಭಟನೆ 13ಕ್ಕೆ: ಸೋಮಪ್ಪ

Published 8 ಜೂನ್ 2024, 13:46 IST
Last Updated 8 ಜೂನ್ 2024, 13:46 IST
ಅಕ್ಷರ ಗಾತ್ರ

ಸೋಮವಾರಪೇಟೆ: ‘ಬಡವರಿಗೆ ಶೀಘ್ರ ನಿವೇಶನ ನೀಡಬೇಕು, ವನ್ಯಜೀವಿ ದಾಳಿ ತಡೆಗೆ ಅರಣ್ಯ ಇಲಾಖೆ ಶಾಶ್ವತ ಯೋಜನೆ ರೂಪಿಸಬೇಕೆಂದು ಆಗ್ರಹಿಸಿ ಜೂನ್ 13ರ ಗುರುವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು’ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಹೇಳಿದರು.

ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಅಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಕಕ್ಕೆ ಹೊಳೆ ಜಂಕ್ಷನ್ ಬಳಿಯಿಂದ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಜೇಸಿ ವೇದಿಕೆಯಲ್ಲಿ ಪ್ರತಿಭಟನೆ ಮತ್ತು ಧರಣಿ ನಡೆಸಲಾಗುವುದು. ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸುವವರೆಗೆ ಪ್ರತಿಭಟನೆ ಮುಂದುವರೆಸಲಾಗುವುದು’ ಎಂದರು.

‘ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ, ಇಂದಿಗೂ ಜಿಲ್ಲೆಯ ಕೂಲಿ ಕಾರ್ಮಿಕರು ಹಾಗೂ ಬಡವರು ಸ್ವಂತ ಮನೆ ಇಲ್ಲದೆ ಬದುಕುತ್ತಿರುವುದು ದುರಂತ. ಕಳೆದ ಅನೇಕ ವರ್ಷಗಳಿಂದ ಕೂಲಿ ಕಾರ್ಮಿಕರು ಮತ್ತು ಬಡವರು ಕಾಫೀ ತೋಟದ ಲೈನ್ ಮನೆ ಮತ್ತು ಬಾಡಿಗೆ ಮನೆಯಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದ‌ಾರೆ. ಇವರಿಗೆ ಸರ್ಕಾರ ಶೀಘ್ರ ನಿವೇಶನ ಅಥವಾ ವಸತಿ ಸೌಲಭ್ಯ ಕಲ್ಪಿಸಬೇಕು’ ಎಂದರು.

‘ಇದುವರೆಗೂ ಯಾವುದೇ ಸರ್ಕಾರಗಳು ಬಡವರ ಕೂಗಿಗೆ ಸ್ಪಂದಿಸಿಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಸರ್ಕಾರಿ ಭೂಮಿ ಇದ್ದರೂ ಅದು ಉಳ್ಳವರ ಪಾಲಾಗುತ್ತಿದೆ. ಕಳೆದ 25 ವರ್ಷಗಳಿಂದ ಅಧಿಕಾರ ನಡೆಸಿದ್ದ ಶಾಸಕರು ಬಡವರಿಗೆ ನಿವೇಶನ ಕಲ್ಪಿಸಲು ಮುಂದಾಗಿಲ್ಲ. ಈಗ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಶಾಸಕರು ಸ್ಪಂದಿಸುತ್ತಾರೆಂಬ ಭರವಸೆ ಇದೆ. ಸ್ಪಂದಿಸದಿದ್ದರೆ, ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾರ್ಮಿಕ ವರ್ಗ ತಕ್ಕ ಪಾಠ ಕಲಿಸಲು ಮುಂದಾಗಲಿದೆ’ ಎಂದು ಎಚ್ಚರಿಕೆ ನೀಡಿದರು.

‘ಜಿಲ್ಲೆಯಲ್ಲಿ ಕಾಡಾನೆ ಹಾಗೂ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಗಣಿಸುತ್ತಿಲ್ಲ. ಅರಣ್ಯ ಇಲಾಖೆ ಪರಿಹಾರದ ಚೆಕ್ ನೀಡಿ ಕೈ ತೊಳೆದುಕೊಳ್ಳತ್ತಿದೆಯೇ ಹೊರತು ಶಾಶ್ವತ ಪರಿಹಾರಕ್ಕೆ ಮುಂದಾಗುತ್ತಿಲ್ಲ’ ಎಂದು ಆರೋಪಿಸಿದರು.

‘ಉನ್ನತ ಮಟ್ಟದ ತಜ್ಞರ ವರದಿ ತರಿಸಿಕೊಂಡು ಆನೆ ಹಾವಳಿ ತಡೆಗೆ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು 2023ರಲ್ಲಿ ಕೊಡಗಿಗೆ ಭೇಟಿ ನೀಡಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದರು. ಆದರೆ, ಇದುವರೆಗೆ ಭರವಸೆ ಈಡೇರಿಲ್ಲ. ಕಾಡಾನೆ ಹಾವಳಿ ನೈಜತೆ ಅಧ್ಯಯನ ಮಾಡಬೇಕು. ಶಾಶ್ವತ ಯೋಜನೆ ರೂಪಿಸಬೇಕು’ ಎಂದರು.

ಪ್ರತಿಭಟನೆಗೆ ಜಿಲ್ಲೆಯ ತೋಟದ ಮಾಲೀಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎಲ್ಲಾ ಬಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭ ತಾಲ್ಲೂಕು ಸಂಚಾಲಕರಾದ ಸುಂದರ ಹಾಗೂ ಶೇಷಪ್ಪ, ಕಾರ್ಯದರ್ಶಿ ಕೆ.ಎಂ.ಮಂಜುನಾಥ್ ಮತ್ತು ಸಿಪಿಐ ತಾಲ್ಲೂಕು ಕಾರ್ಯದರ್ಶಿ ಶಬಾನಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT