ಮಡಿಕೇರಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ದ ನಿಷೇಧ ಮಾತ್ರದಿಂದಲೇ ಅವರ ಚಟುವಟಿಕೆಗಳು ನಿಲ್ಲುವುದಿಲ್ಲ. ಅವರ ಅಕ್ರಮ ಶಸ್ತ್ರಾಸ್ತ್ರ ತಯಾರಿಕಾ ಕೇಂದ್ರಗಳ ಮೇಲೆ ದಾಳಿ ನಡೆಸಿ, ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಒತ್ತಾಯಿಸಿದರು.
‘ಅಂತಹ ಅಕ್ರಮ ಶಸ್ತ್ರಾಸ್ತ್ರ ತಯಾರಿಕಾ ಕೇಂದ್ರಗಳು ಎಲ್ಲಿವೆ’ ಎಂಬ ಸುದ್ದಿಗಾರರ ಪ್ರಶ್ನೆಗೆ ಮಾಹಿತಿ ನೀಡಲು ನಿರಾಕರಿಸಿದ ಅವರು, ‘ಅಂತಹ ಕೇಂದ್ರಗಳು ಕೊಡಗಿನಲ್ಲೂ ಇರಬಹುದು. ಆ ಕುರಿತ ಮಾಹಿತಿಯನ್ನು ಗೃಹ ಇಲಾಖೆಗೆ ನೀಡುತ್ತೇನೆ’ ಎಂದು ಹೇಳಿದರು.
ಈ ದೇಶದ ಅನ್ನವನ್ನು ತಿಂದು ಪಾಕಿಸ್ತಾನಕ್ಕೆ ಜಯಕಾರ ಕೂಗುವುದನ್ನು ಒಪ್ಪಲು ಸಾಧ್ಯವೇ ಇಲ್ಲ. ಆಂತರಿಕ ಭದ್ರತೆಗೆ ಧಕ್ಕೆ ತರುವ ಕೆಲಸ ಮಾಡುವುದು ಸರಿಯಲ್ಲ. ಪಿಎಫ್ಐ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.