ಮಡಿಕೇರಿ: ಕೊಡಗಿನ ಸಂತ್ರಸ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ. 14ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುತ್ತದೆ ಎಂದು ಪ್ರಕೃತಿ ವಿಕೋಪ ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ದೇವಯ್ಯ ತಿಳಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮನೆ ನಿರ್ಮಾಣದ ಬೇಡಿಕೆಯನ್ನು ಹೊರತುಪಡಿಸಿ ಉಳಿದ ಯಾವ ಬೇಡಿಕೆಗಳನ್ನೂ ಈಡೇರಿಸಲು ಗಮನ ಹರಿಸಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಅಸಮಾಧಾನ ವ್ಯಕ್ತಪಡಿಸಿದರು.
ಪ್ರಕೃತಿ ವಿಕೋಪದ ಸಮಯದಲ್ಲಿ ಸಾಕಷ್ಟು ಮರಗಳು ನೆಲಕ್ಕುರುಳಿವೆ. ಈ ಮರಗಳನ್ನು ಸಾಗಣೆ ಮಾಡಲು ಆಯಾ ತೋಟದ ಮಾಲೀಕರಿಗೆ ಅವಕಾಶ ನೀಡಬೇಕು. ಹಿಂದೆ ಅರಣ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ನಿರ್ಧರಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದರು. ಆದರೆ, ಯಾವುದೇ ಕ್ರಮ ಆಗಿಲ್ಲ ಎಂದು ದೂರಿದರು.
ಸಂತ್ರಸ್ತರಿಗೆ 2.45 ಸೆಂಟ್ ಜಾಗದಲ್ಲಿ ಮನೆ ನಿರ್ಮಿಸಲು ಸಿದ್ಧತೆ ನಡೆಸಿದೆ. ಆದರೆ, ಈ ಜಾಗದಲ್ಲಿ ಕೃಷಿಕರಾದ ಕೊಡಗಿನ ಜನರು ಜೀವನ ನಡೆಸಲು ಸಾಧ್ಯವಿಲ್ಲ. ಕೃಷಿಗೆ ಉಪಯೋಗಿಸುವ ವಸ್ತುಗಳು, ವಾಹನಗಳು ಸೇರಿದಂತೆ ಇತರೆ ವಸ್ತುಗಳನ್ನು ಈ ಸಣ್ಣ ಜಾಗದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದರು.