ವಿರಾಜಪೇಟೆ: ಪೆಟ್ರೋಲ್ ಹಾಗೂ ಡಿಸೇಲ್ ದರ ಏರಿಕೆಯನ್ನು ಖಂಡಿಸಿ ವಿರಾಜಪೇಟೆ ನಗರದ ಐಕ್ಯ ಹೋರಾಟ ಸಮಿತಿ ವತಿಯಿಂದ ಪಟ್ಟಣದಲ್ಲಿ ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಐಕ್ಯ ವೇದಿಕೆಯ ಸಂಚಾಲಕ ಯೋಗೇಶ್ ನಾಯ್ಡು ಅವರು ಹಿಂದೆ ತೈಲ ದರ ಏರಿಕೆಯನ್ನು ಖಂಡಿಸಿ ಹಿಂದಿನ ಯುಪಿಎ ಸರ್ಕಾರದ ವಿರುದ್ಧ ಹೋರಾಟ ನಡೆಸಿ ಆಡಳಿತಕ್ಕೆ ಬಂದಿರುವ ಬಿಜೆಪಿ ಇದೀಗ ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಕುಸಿದರೂ ಕೂಡ ಬೆಲೆ ಏರಿಸಿದೆ. ಇದರಿಂದ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ರೈತ ಹಾಗೂ ಕಾಫಿ ಬೆಳೆಗಾರರಿಗೆ ಸೂಕ್ತ ದರ ಲಭಿಸುತ್ತಿಲ್ಲ. ಕೂಲಿ ಕಾರ್ಮಿಕರು ಬೀದಿಗೆ ಬಿಳುವ ಸ್ಥಿತಿ ನಿರ್ಮಾಣವಾಗಿದೆ. ಬೆಲೆ ಏರಿಕೆ ತಡೆಯಲು ಸಾಧ್ಯವಾಗದೆ ತೈಲ ಕಂಪನಿಗಳನ್ನು ಮಾರಾಟ ಮಾಡುವ ಈಗಿನ ಸರ್ಕಾರ ಜನವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಎನಿಸಿಕೊಂಡಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸಿಪಿಐ, ಸಿಪಿಐ(ಎಂ), ಜೆಡಿಎಸ್, ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ, ದಲಿತ ಸಂಘರ್ಷ ಸಮಿತಿಗಳು ಭಾಗವಹಿಸಿದ್ದವು. ಪ್ರತಿಭಟನಕಾರರು ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.