ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರವೂ ಮಳೆಯ ಆರ್ಭಟ ಮುಂದುವರಿದಿದ್ದು ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಮಂಗಳವಾರ ರಾತ್ರಿಯಿಡೀ ಗಾಳಿ ಸಹಿತ ಭಾರಿ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.
ಭೇತ್ರಿ ಬಳಿ ಕಾವೇರಿ ನದಿಯ ನೀರು ಸೇತುವೆ ಮಟ್ಟಕ್ಕೆ ಬಂದಿದೆ. ದಕ್ಷಿಣ ಕೊಡಗಿನ ಶ್ರೀಮಂಗಲ, ಬಲ್ಯಮಂಡೂರು, ಹರಿಹರ, ಕಾನೂರು, ನಿಟ್ಟೂರು, ಬಾಳೆಲೆ ಭಾಗದಲ್ಲಿ ಲಕ್ಷ್ಮಣತೀರ್ಥ ನದಿಯ ಪ್ರವಾಹದಲ್ಲಿ ನೂರಾರು ಎಕರೆ ಗದ್ದೆಗಳು ಜಲಾವೃತವಾಗಿದ್ದು ಸಮುದ್ರದಂತೆ ಕಾಣಿಸುತ್ತಿವೆ.
ನಾಟಿ ಮಾಡಿದ ಗದ್ದೆಗಳು ಪ್ರವಾಹಕ್ಕೆ ಸಿಲುಕಿದ್ದು ಅಪಾರ ನಷ್ಟವಾಗಿದೆ. ನದಿ ಅಕ್ಕಪಕ್ಕದ ಕಾಫಿ ತೋಟಕ್ಕೂ ನೀರು ನುಗ್ಗಿದೆ. ಕೀರೆಹೊಳೆಯಲ್ಲೂ ನೀರಿನ ಮಟ್ಟ ಏರಿಕೆಯಾಗಿದೆ.
ಭಾಗಮಂಡಲ, ತಲಕಾವೇರಿ ಹಾಗೂ ನಾಪೋಕ್ಲು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗಾಳಿಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.