ಮಡಿಕೇರಿ: ಕೊಡಗು ಜಿಲ್ಲೆಯ ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ನಾಲ್ಕೈದು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಏರಿಕೆಯಾಗಿದೆ. ಬುಧವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಹಳ್ಳ, ಕೊಳ್ಳಗಳಲ್ಲೂ ನೀರಿನಮಟ್ಟ ಏರಿಕೆ ಕಂಡುಬಂದಿದೆ.
ಕೊಟ್ಟಮುಡಿ ಬಳಿ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗಿದ್ದು ಜಲಾಶಯದ ಒಳಹರಿವು ಏರಿಕೆಯಾಗಿದೆ. ಗುರುವಾರ ಮಳೆ ಕೊಂಚ ಬಿಡುವು ನೀಡಿತ್ತು. ಮಡಿಕೇರಿಯ ಚಾಮುಂಡೇಶ್ವರಿ ನಗರದಲ್ಲಿ ಗುಡ್ಡ ಮತ್ತಷ್ಟು ಕುಸಿಯುವ ಆತಂಕವಿದ್ದು ಐದು ಕುಟುಂಬಗಳನ್ನು ಗಾಳಿಬೀಡು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.