ಮಡಿಕೇರಿ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕೊರೊನಾ ನಿರ್ವಹಣೆ ಹೆಸರಿನಲ್ಲಿ ಅವ್ಯವಹಾರದಲ್ಲಿ ತೊಡಗಿದೆ ಎಂದು ಆರೋಪಿಸಿ, ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಜಿಲ್ಲಾ ಘಟಕದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.
ಸಂಘಟನೆಯ ಪ್ರಮುಖರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಾಜ್ಯ ಸರ್ಕಾರ ಕಾರ್ಯ ವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮಿನ್ ಮೊಹಿಸಿನ್ ಮಾತನಾಡಿ, ‘ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸರ್ಕಾರ ಈ ಪರಿಸ್ಥಿತಿಯ ದುರ್ಲಾಭ ಪಡೆದು ಮಾಸ್ಕ್ ಮತ್ತು ಕೋವಿಡ್ ಟೆಸ್ಟ್ ಕಿಟ್ ವ್ಯವಹಾರದಲ್ಲಿ ಭಾರೀ ದಂಧೆಯಲ್ಲಿ ತೊಡಗಿದೆ ಎಂದು ದೂರಿದರು.
ಸೋಂಕಿತರ ದಿನದ ಖರ್ಚು, ಥರ್ಮಲ್ ಸ್ಕ್ಯಾನರ್, ಆಮ್ಲಜನಕ ಸಿಲಿಂಡರ್, ಗ್ಲೌಸ್, ಪಿಪಿಇ ಕಿಟ್, ವೆಂಟಿಲೇಟರ್ ಸಲಕರಣೆಗಳ ಖರೀದಿಗೆ ದುಪ್ಪಟ್ಟು ಲೆಕ್ಕ ತೋರಿಸಿ ರಾಜ್ಯದ ಜನರ ಹಣ ಲೂಟಿ ಮಾಡಲಾಗುತ್ತಿದೆ ಎಂದು ಆಪಾದಿಸಿದರು.
ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಜನರ ಸಾವಿನ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಮಾಡುತ್ತಿವೆಯೇ ಹೊರತು ಜನಹಿತವನ್ನು ಕಾಯುತ್ತಿಲ್ಲ ಎಂದು ದೂರಿದರು.
ಪ್ರತಿಭಟನೆಯಲ್ಲಿ ಎಸ್ಡಿಪಿಐ ಜಿಲ್ಲಾ ಅಧ್ಯಕ್ಷ ಟಿ.ಎಚ್.ಅಬೂಬಕ್ಕರ್, ಕಾರ್ಯದರ್ಶಿ ಅಬ್ದುಲ್ ಅಡ್ಕರ್, ತುಫೆಲ್, ಅಫ್ಸರ್ ಕೊಡ್ಲಿಪೇಟೆ, ಮುಖಂಡರಾದ ಕೆ.ಜಿ.ಪೀಟರ್, ಮೈಕಲ್ ಹಾಜರಿದ್ದರು.