ಬದುಕು ರೂಪಿಸುವ ಶಿಕ್ಷಕರಿಗೆ ನಮನ

ಮಡಿಕೇರಿ: ‘ಉತ್ತಮ ಸಮಾಜ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದದ್ದು. ಈ ನಿಟ್ಟಿನಲ್ಲಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮತ್ತಷ್ಟು ಉತ್ತಮಗೊಳಿಸುವ ಕಾರ್ಯ ಶಿಕ್ಷಕರಿಂದ ಆಗಬೇಕು’ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ ಮತ್ತು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಆಶ್ರಯದಲ್ಲಿ ನಗರದ ಸಂತ ಮೈಕಲರ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಕೊಡಗು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಕಳೆದ 4-5 ವರ್ಷಗಳಿಂದಲೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ. ಶಿಕ್ಷಕರೊಂದಿಗೆ ಸಮಯ ಕಳೆಯುವುದು ಸಂತಸದ ವಿಷಯ. ಒಬ್ಬ ಜಿಲ್ಲಾಧಿಕಾರಿಯಾಗಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಬಹು ಮುಖ್ಯವಾದವು’ ಎಂದು ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು.
ಶಾಲಾ ಹಂತದಲ್ಲಿ ಶಿಕ್ಷಕರು ಹೇಳಿಕೊಡುವ ಪಾಠ ಮತ್ತು ವಿಚಾರಗಳು ಮಕ್ಕಳಲ್ಲಿ ಆಳವಾಗಿ ಬೇರೂರುತ್ತದೆ. ಈ ನಿಟ್ಟಿನಲ್ಲಿ ಮತ್ತಷ್ಟು ಉತ್ತಮ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಜಿಲ್ಲೆಯಲ್ಲಿ ಬಹುದೂರದವರೆಗೆ ಶಿಕ್ಷಕರು ಕಾಲ್ನಡಿಗೆಯಲ್ಲಿ ತೆರಳಿ ಪಾಠ ಮಾಡುತ್ತಾರೆ. ಕೆಲವು ಕಡೆ ವಿದ್ಯುತ್ ಸಮಸ್ಯೆಯಿದ್ದರೂ ಅವೆಲ್ಲವನ್ನೂ ಮೀರಿ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಶಂಸೆ ವ್ಯಕ್ತಪಡಿಸಿದರು.
ಮಡಿಕೇರಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಮಾತನಾಡಿ, ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವು ಹಿರಿದು. ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದವರ ಸೇವಾ ಕಾರ್ಯವನ್ನು ಯಾರು ಮರೆಯುವಂತಿಲ್ಲ ಎಂದು ಹೇಳಿದರು
ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅಪ್ಪಂಡೇರಂಡ ಭವ್ಯಾ ಅವರು, ಜಿಲ್ಲೆಯ ಗಾಳಿ ಮಳೆಯನ್ನು ಲೆಕ್ಕಿಸದೆ ಮಕ್ಕಳ ಭವಿಷ್ಯ ರೂಪಿಸುವ ಸಲುವಾಗಿ ಸಾಕಷ್ಟು ಶ್ರಮ ವಹಿಸುತ್ತಾರೆ. ನಿವೃತ್ತ ಶಿಕ್ಷಕರು ಸಹ ತಮ್ಮ ಸೇವಾವಧಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಹೇಳಿದರು.
ಅಲ್ಲದೆ ಜಿಲ್ಲೆಯ ಶಿಕ್ಷಕರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಸೇವಾ ಪ್ರಶಸ್ತಿ ದೊರೆಯುವಂತಾಗಲಿ ಎಂದು ಅಪ್ಪಂಡೇರಂಡ ಭವ್ಯ ಅವರು ಶುಭ ಹಾರೈಸಿದರು.
ಮಡಿಕೇರಿ ತಾ.ಪಂ ಇಒ ಲಕ್ಷ್ಮೀ ಮಾತನಾಡಿ ಶಿಕ್ಷಕರು ಸರ್ವರಿಂದಲೂ ಪೂಜ್ಯನೀಯರು ಮತ್ತು ವಂದನೀಯರು ಎಂದು ಅವರು ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚೇತನ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ್, ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಜಯಲಕ್ಷ್ಮೀ ಅವರು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಕುರಿತು ಮಾತನಾಡಿದರು.
ಈ ಸಂದರ್ಭ ಜಿಲ್ಲೆಯ 9 ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಲದೆ ನಿವೃತ್ತರಾದ ಶಿಕ್ಷಕರಿಗೂ ಸಹ ಶಾಲು ಫಲ ತಾಂಬೂಲ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕೂ ಮೊದಲು ಇತ್ತೀಚೆಗೆ ನಿಧನರಾದ ಮಾಜಿ ರಾಷ್ಟ್ರಪತಿ ಪುರಸ್ಕೃತ ಪ್ರಣಬ್ ಮುಖರ್ಜಿ ಮತ್ತು ಕೊಡಗಿನ ಪ್ರಾಕೃತಿಕ ವಿಕೋಪದಲ್ಲಿ ನಿಧನರಾದವರಿಗೆ ಸಂತಾಪ ಸೂಚಿಸಲಾಯಿತು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರವಿ, ಮಡಿಕೇರಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ಜಿಲ್ಲಾ ಅನುದಾನಿತ ಪ್ರೌಢ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ವಿಲ್ಫ್ರೆಡ್ ಕ್ರಾಸ್ತ, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕುಮಾರ್, ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಜಿಮ್ಮಿ ಸಿಕ್ವೆರಾ, ರಾಜ್ಯ ಎಸ್ಸಿ-ಎಸ್ಟಿ ಪ್ರಾಥಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಸಿ.ರಾಜು, ರೆವರೆಂಡ್ ಫಾದರ್ ನವೀನ್ ಹಾಜರಿದ್ದರು.
ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಎಸ್. ಮಚ್ಚಾಡೋ ಅವರು ಸ್ವಾಗತಿಸಿದರು. ಲಹರಿ ಶಿಕ್ಷಕರ ಕಲಾ ಬಳಗದವರು ನಾಡಗೀತೆ, ರಾಷ್ಟ್ರಗೀತೆ ಹಾಡಿದರು. ಅನಿತಾ ಎಸ್.ಡಿ. ಮತ್ತು ರಂಜಿತ್ ಅವರು ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಅವರು ವಂದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.