ಮಡಿಕೇರಿ: ಮಡಿಕೇರಿ ದಸರಾ ಸಾಮರಸ್ಯ ಹಾಗೂ ಸೋದರತ್ವವನ್ನು ಒಳಗೊಂಡಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಶ್ಲಾಘಿಸಿದರು.
ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಮಂಗಳವಾರ ತಡರಾತ್ರಿ ನಡೆದ ವಿಜಯದಶಮಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಡಿಕೇರಿ ದಸರಾಗೆ ತನ್ನದೇ ಆದ ಇತಿಹಾಸವಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕತೆಯ ಜೊತೆಗೆ ಸಾಮರಸ್ಯ ಮತ್ತು ಸೋದರತ್ವವನ್ನು ಒಳಗೊಂಡಿದೆ. ಇದು ಪ್ರತಿಯೊಬ್ಬರಲ್ಲಿ ಏಕತೆ ಮತ್ತು ಭ್ರಾತೃತ್ವವನ್ನು ಬೆಸೆಯುತ್ತದೆ. ದಸರಾದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವುದು ಇದರ ವಿಶೇಷವಾಗಿದೆ ಎಂದು ತಿಳಿಸಿದರು.
ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಲಾಗಿದೆ. ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರಲು ಎಲ್ಲರೂ ಪ್ರಯತ್ನಿಸಬೇಕು. ದ್ವೇಷ, ಅಸೂಯೆ, ಅಸಹನೆ, ಅಸಹಿಷ್ಣುತೆಯಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ಎಲ್ಲರೂ ಭ್ರಾತೃತ್ವದಿಂದ ಬದುಕಿದಾಗ ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯ ಎಂದು ಪ್ರತಿಪಾದಿಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮಾತನಾಡಿ, ‘ಪ್ರಸಕ್ತ ವರ್ಷದಲ್ಲಿ ಬರ ಇದ್ದರೂ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿ ದಸರಾಗೆ ಸ್ಪಂದಿಸಿದ್ದಾರೆ’ ಎಂದು ಹೇಳಿದರು.
ಮಡಿಕೇರಿ ದಸರಾದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವುದು ವಿಶೇಷವಾಗಿದೆ. ದಸರಾ ಯಶಸ್ಸಿಗೆ ಎಲ್ಲರೂ ಕೈಜೋಡಿಸಿರುವುದು ಶ್ಲಾಘನೀಯ ಕಾರ್ಯ ಎಂದರು.
ಶಾಸಕ ಡಾ.ಮಂತರ್ಗೌಡ ಮಾತನಾಡಿ, ‘ಈ ಬಾರಿ ಮಳೆ ಕಡಿಮೆ ಆದ ಕಾರಣ ಬರ ಎಂದು ಘೋಷಣೆಯಾಗಿದೆ. ಆದಷ್ಟು ಇತಿ ಮಿತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಮುಖ್ಯಮಂತ್ರಿಯವರು ಮತ್ತು ಉಪ ಮುಖ್ಯಮಂತ್ರಿ ಅವರು ಸಲಹೆ ಮಾಡಿದ್ದರು. ಆದರೂ, ಮಡಿಕೇರಿ ದಸರಾಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು.
ದಸರಾ ಕಾರ್ಯಕ್ರಮಕ್ಕೆ ಬಿಡುಗಡೆಯಾದ ಅನುದಾನಲ್ಲಿ ₹ 20-30 ಲಕ್ಷ ಉಳಿಸಿ, ಗಾಂಧಿ ಮೈದಾನದಲ್ಲಿ ಶಾಶ್ವತ ವೇದಿಕೆ ನಿರ್ಮಾಣ ಮಾಡಲು ಪ್ರಯತ್ನಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಪ್ರತಿಯೊಬ್ಬ ನಾಗರಿಕರಿಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ರಸ್ತೆ ಹೀಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಆದ್ಯತೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಕೃಷಿ ಜೊತೆಗೆ ಪ್ರವಾಸೋದ್ಯಮವನ್ನು ಸಹ ಅಭಿವೃದ್ಧಿ ಪಡಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ಪತ್ರಿಕೋದ್ಯಮಿ ಜಿ.ಚಿದ್ವಿಲಾಸ್ ಮಾತನಾಡಿ, ‘ಮಡಿಕೇರಿ ದಸರಾ ಆಚರಣೆ ಸಂಬಂಧಿಸಿದಂತೆ ಮೈಸೂರು ದಸರಾ ಮಾದರಿಯಲ್ಲಿ ಬಜೆಟ್ನಲ್ಲಿ ಅನುದಾನ ಪ್ರಕಟಿಸಬೇಕು. ಆ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರಿಯಬೇಕು’ ಎಂದು ಮನವಿ ಮಾಡಿದರು.
ಚಿತ್ರನಟ ಅಭಿಷೇಕ್ ಅಂಬರೀಶ್ ಮಾತನಾಡಿ, ‘ನಮ್ಮ ಕುಟುಂಬ ಮತ್ತು ಕೊಡಗು ಜಿಲ್ಲೆಗೆ ಅವಿನಾಭಾವ ಸಂಬಂಧವಿದೆ. ನಮ್ಮ ತಂದೆಯವರು ಕೊಡಗು ಜಿಲ್ಲೆಯನ್ನು ಹೆಚ್ಚು ಗೌರವಿಸುತ್ತಿದ್ದರು. ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಲ್ಲಿ ಹುಟ್ಟುವುದು ವಿಶೇಷ. ಕೊಡಗು ಒಂದು ರೀತಿ ಹೆಚ್ಚು ಪ್ರೀತಿಪಾತ್ರವಾದ ಜಿಲ್ಲೆಯಾಗಿದೆ’ ಎಂದು ಹೇಳಿದರು.
ನಗರ ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ‘ಕರಗ ಉತ್ಸವದೊಂದಿಗೆ ಮಡಿಕೇರಿ ದಸರಾ ಆರಂಭವಾಗುತ್ತದೆ. ದಶ ಮಂಟಪಗಳ ಶೋಭಾಯಾತ್ರೆ ಮಡಿಕೇರಿ ದಸರಾ ವಿಶೇಷವಾಗಿದೆ’ ಎಂದರು.
ರಾಜರ ಕಾಲದಿಂದಲೂ ಮಡಿಕೇರಿ ದಸರಾ ಆಚರಿಸಿಕೊಂಡು ಬರಲಾಗಿದೆ. ಈ ಹಿಂದೆ ತನ್ವೀರ್ ಶೇಟ್ ಅವರು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಸರ್ಕಾರದಿಂದ ₹ 10 ಲಕ್ಷ ಬಿಡುಗಡೆ ಮಾಡಿಸಿದ್ದರು. ಅವರ ಅವಧಿಯಿಂದ ಮಡಿಕೇರಿ ದಸರಾಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗುತ್ತ ಬಂದಿದೆ ಎಂದು ಅವರು ತಿಳಿಸಿದರು.
ಮಡಿಕೇರಿ ದಸರಾಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ನಗರ ದಸರಾ ಸಮಿತಿ ಹೀಗೆ ಎಲ್ಲರೂ ಕೈಜೋಡಿಸಿದ್ದಾರೆ ಎಂದು ಶ್ಲಾಘಿಸಿದರು.
ಹೈಕೋರ್ಟ್ ಹಿರಿಯ ವಕೀಲ ಚಂದ್ರಮೌಳಿ ಮಾತನಾಡಿ, ‘ದಸರಾ ಹಬ್ಬಗೆ ಎಲ್ಲರೂ ಶ್ರಮಿಸಿದ್ದು, ಹಲವು ಸಂಘ ಸಂಸ್ಥೆಗಳು ಸಹ ಕೈಜೋಡಿಸಿವೆ’ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಸರ್ವೋದಯ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್, ಪೌರಾಯುಕ್ತ ವಿಜಯ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ನಗರದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಜಿ ಅರುಣ್ ಶೆಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.