ಸೋಮವಾರಪೇಟೆ: ಸಂಸದ ಅನಂತ್ ಕುಮಾರ್ ಹೆಗಡೆ ಅವರು ಸಂವಿಧಾನ ವಿರೋಧಿ ಹೇಳಿಕೆಗಳನ್ನು ನಿರಂತರವಾಗಿ ನೀಡುತ್ತಿದ್ದು, ಕೂಡಲೇ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾಧ್ಯಕ್ಷ ಕೆ.ಬಿ.ರಾಜು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಆಗ್ರಹಿಸಿದ್ದಾರೆ.
ತಹಶೀಲ್ದಾರ್ ನವೀನ್ ಕುಮಾರ್ ಅವರ ಮೂಲಕ ಮುಖ್ಯಮಂತ್ರಿಗೆ ಶನಿವಾರ ಮನವಿ ಪತ್ರ ಸಲ್ಲಿದರು.
‘ದೇಶದ ಸಂವಿಧಾನವನ್ನು ಬದಲಾಯಿಸುವುದಕ್ಕೆ ನಾವು ಅಧಿಕಾರಕ್ಕೆ ಬಂದಿದ್ದೇವೆ, ಬಹುಮತ ಲಭಿಸಿದರೆ ಖಂಡಿತವಾಗಿಯೂ ಭಾರತದ ಸಂವಿಧಾನವನ್ನು ಬದಲಿಸುತ್ತೇವೆ’ ಎಂದು ಹೇಳಿಕೆ ನೀಡಿರುವ ಪ್ರಜಾಪ್ರಭುತ್ವ ವಿರೋಧಿ ಸಂಸದ ಅನಂತಕುಮಾರ್ ಹೆಗಡೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಮನವಿ ಸಲ್ಲಿಸುವ ಸಂದರ್ಭ ವಿವಿಧ ಸಂಘಟನೆಗಳ ಪ್ರಮುಖರಾದ ಬಿ.ಈ.ಜಯೇಂದ್ರ, ಜನಾರ್ದನ್, ಟಿ.ಈ.ಸುರೇಶ್, ಎಂ.ಪಿ.ಹೊನ್ನಪ್ಪ, ಎಸ್.ಕೆ.ಸ್ವಾಮಿ ಇದ್ದರು.