ಕುಶಾಲನಗರ: ಮಹರ್ಷಿ ವಾಲ್ಮೀಕಿ ಗುರುಪೀಠದ ಆಶ್ರಯದಲ್ಲಿ ಫೆ.8 ಮತ್ತು 9ರಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಗುರುಪೀಠದ ಅಧ್ಯಕ್ಷ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.
ಮಠದ 21ನೇ ವಾರ್ಷಿಕೋತ್ಸವ, ಪುಣ್ಯಾನಂದಪುರಿ ಸ್ವಾಮೀಜಿ ಅವರ 12ನೇ ವರ್ಷದ ಪುಣ್ಯಾರಾಧನೆ ಹಾಗೂ ನನ್ನ 11ನೇ ಪಟ್ಟಾಕಾರ ಮಹೋತ್ಸವ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನಾಯಕ ಸಮುದಾಯದವರು ಅನೇಕ ಸಮಸ್ಯೆಗಳಿಂದ ನಲುಗುತ್ತಿ ದ್ದಾರೆ. ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಜಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.
ಜಾತ್ರೆಯ ಪ್ರಚಾರದ ಪೋಸ್ಟರ್ ಅನ್ನು ಸ್ವಾಮೀಜಿ ಬಿಡುಗಡೆಗೊಳಿಸಿದರು. ಜಿ.ಪಂ ಸದಸ್ಯೆ ಕೆ.ಆರ್.ಮಂಜುಳಾ, ನಾಯಕ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಎನ್.ಅಶೋಕ್, ಜಂಟಿ ಕಾರ್ಯದರ್ಶಿ ಪರಮೇಶ್, ನಿರ್ದೇಶಕ ಕೃಷ್ಣ ಇದ್ದರು.
ಮಠದಿಂದ ನಾಯಕ ಸಮುದಾಯದ ಗಣತಿ ಕಾರ್ಯ:
ರಾಜ್ಯ ಸರ್ಕಾರ ಕೈಗೊಂಡ ಜಾತಿ ಗಣತಿಯ ವರದಿಯನ್ನು ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿದ್ದೆ. ಬಲಿಷ್ಠ ಸಮುದಾಯಗಳ ಒತ್ತಡಕ್ಕೆ ಮಣಿದಿದೆ. ಹೀಗಾಗಿ, ಗುರುಪೀಠವು ನಾಯಕ ಸಮುದಾಯದ ಗಣತಿ ಕಾರ್ಯ ಕೈಗೊಂಡಿದ್ದು, ಪ್ರತಿ ಹಳ್ಳಿಗೆ ಹೋಗಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಮಾಹಿತಿಯನ್ನು ಜಾತ್ರಾ ಮಹೋತ್ಸವದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ ಎಂದು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು.