ಮಡಿಕೇರಿ: ಮುಂಬರುವ ಲೋಕಸಭಾ ಚುನಾವಣೆಯ ಮೈಸೂರು– ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶುಕ್ರವಾರ ಕೊಡಗಿಗೆ ಬಂದು ರಸ್ತೆಬದಿಯಲ್ಲಿ ಎಳನೀರು ಕುಡಿದು, ಕಾರ್ಯಕರ್ತರೊಂದಿಗೆ ನಿಂತುಕೊಂಡು ಊಟ ಮಾಡಿದರು.
ಇದಕ್ಕೂ ಮುನ್ನ ಅವರು ಕುಶಾಲನಗರದ ಕೊಪ್ಪ ಸೇತುವೆ ಬಳಿ ಇರುವ ಕಾವೇರಿ ಮಾತೆಯ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಮಡಿಕೇರಿಯಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿದರು.
‘ರಾಜವಂಶಸ್ಥರು ಜನಸಾಮಾನ್ಯರ ಕೈಗೆ ಸಿಗುವುದಿಲ್ಲ’ ಎಂಬ ಆರೋಪ ಇದೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಾರ್ವಜನಿಕ ಜೀವನಕ್ಕೆ ಬಂದ ಮೇಲೆ ಎಲ್ಲರಿಗೂ ಲಭ್ಯರಾಗಬೇಕಾಗುತ್ತದೆ’ ಎಂದು ಹೇಳಿದರು.
ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದ ಪ್ರತಾಪಸಿಂಹ ಅವರು ಈಗಾಗಲೇ ಶುಭಾಶಯ ಕೋರಿದ್ದಾರೆ. ಅವರೂ ಬಂದು ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಾರೆ ಎಂಬ ನಿರೀಕ್ಷೆ ಇದೆ. ಅವರು 10 ವರ್ಷ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಇದಕ್ಕೂ ಮುನ್ನ ಅವರು ಇಲ್ಲಿ ನಡೆದ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಸಭೆಯಲ್ಲಿ ಭಾಗಿಯಾಗಿ, ‘ಪ್ರಕೃತಿಗೆ ಪೂರಕವಾದ ಅಭಿವೃದ್ಧಿ ಯೋಜನೆಗಳನ್ನು ಕೊಡಗಿನಲ್ಲಿ ಜಾರಿಗೆ ತರುವೆ’ ಎಂದು ಭರವಸೆ ನೀಡಿದರು.
ಈ ವೇಳೆ ಕಾರ್ಯಕರ್ತರು ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು