ವಿರಾಜಪೇಟೆ: ದೇಶಪ್ರೇಮ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಸನ್ನಡತೆಯ ಮಾರ್ಗದಲ್ಲಿ ಪ್ರತಿಯೊಬ್ಬರೂ ಮುಂದುವರಿದರೆ ದೇಶ ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಸಂಪದ್ಭರಿತ ರಾಷ್ಟ್ರವಾಗುತ್ತದೆ ಎಂದು ತಹಶೀಲ್ದಾರ್ ಮಹದೇವಸ್ವಾಮಿ ಅಭಿಪ್ರಾಯಪಟ್ಟರು.
ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದ ತಾಲ್ಲೂಕು ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕಾವೇರಿ ಕಾಲೇಜಿನ ಉಪನ್ಯಾಸಕಿ ಎಂ.ರೇವತಿ ಪೂವಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಬಿ.ಸ್ಮಿತಾ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ಶಶಿ ಸುಬ್ರಮಣಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೂತಂಡ ಸಚಿನ್ ಕುಟ್ಟಯ್ಯ, ಉಪಾಧ್ಯಕ್ಷೆ ತಸ್ನಿಂ ಅಕ್ತರ್, ಡಿವೈಎಸ್ಪಿ ನಾಗಪ್ಪ, ಸಿಪಿಐ ಕುಮಾರ್ ಆರಾಧ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಿರಣ್ ಪಢ್ನೇಕರ್ ಉಪಸ್ಥಿತರಿದ್ದರು.
ಸಮಾರಂಭಕ್ಕೆ ಮೊದಲು ಪಟ್ಟಣದ ಅಯ್ಯಪ್ಪ ಸ್ವಾಮಿ ರಸ್ತೆಯಿಂದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಬಿರುನಾಣಿಯ ಮರೆನಾಡು ಪ್ರೌಢಶಾಲೆಯ ಅಗ್ನಿ ಕ್ಷಿಪಣಿಯನ್ನು ಬಿಂಬಿಸುವ ಸ್ತಬ್ಧಚಿತ್ರ ಪ್ರಥಮ ಬಹುಮಾನ ಗೆದ್ದುಕೊಂಡಿತು.
ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸರ್ವಧರ್ಮ ಸಮನ್ವಯತೆಯನ್ನು ಬಿಂಬಿಸುವ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಹಾಗೂ ಪಟ್ಟಣದ ಕೂರ್ಗ್ ವ್ಯಾಲಿ ಶಾಲೆಯ ಕೆಂಪು ಕೋಟೆಯ ಸ್ತಬ್ಧಚಿತ್ರ ತೃತೀಯ ಬಹುಮಾನ ಪಡೆಯಿತು.
ಕರ್ನಾಟಕ ಸಂಘ: ಕೇರಳ ಗಡಿ ಪ್ರದೇಶದ ಗಡಿನಾಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ ಸೇವೆಗೆ ಅವಿರತವಾಗಿ ಶ್ರಮಿಸಲು ಕರ್ನಾಟಕ ಸಂಘ ವಿವಿಧ ಯೋಜನೆ ಹಮ್ಮಿಕೊಂಡಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಚಿಲ್ಲವಂಡ ಪಿ. ಕಾವೇರಪ್ಪ ಹೇಳಿದರು.
ಗಣರಾಜ್ಯೋತ್ಸವದ ಅಂಗವಾಗಿ ಇಲ್ಲಿನ ಕರ್ನಾಟಕ ಸಂಘದಿಂದ ಪುರಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಕೊಡವ ಸಮಾಜದ ಅಧ್ಯಕ್ಷ ವಾಂಚೀರ ನಾಣಯ್ಯ ಉದ್ಘಾಟಿಸಿದರು.
ಕೆಎಸ್ಆರ್ಪಿಯ ನಿವೃತ್ತ ಹವಾಲ್ದಾರ್ ಪೂಳಂಡ ತಿಮ್ಮಯ್ಯ ಅವರನ್ನು ಸನ್ಮಾನಿಸಲಾಯಿತು. ತಾಲ್ಲೂಕು ಪಂಚಾಯಿತಿ ಸದಸ್ಯ ಮಾಳೇಟಿರ ಪ್ರಶಾಂತ್ ಉತ್ತಪ್ಪ, ಎಂ.ಎಂ.ಕುಟ್ಟಪ್ಪ ಭಾಗವಹಿಸಿದ್ದರು.
ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬೊಳ್ಕಾಟ್ ಹಾಗೂ ಉಮ್ಮತಾಟ್ ಸ್ಪರ್ಧೆ ಏರ್ಪಡಿಸಲಾಗಿತ್ತು. ಸಂಘದ ಸಿ.ಎಂ.ಸುರೇಶ್ ನಾಣಯ್ಯ ಸ್ವಾಗತಿಸಿದರು. ಕಾರ್ಯದರ್ಶಿ ಅರುಣ್ ಅಪ್ಪಣ್ಣ ನಿರೂಪಿಸಿದರು. ಸಹ ಕಾರ್ಯದರ್ಶಿ ಎಂ.ಸಿ.ಅಶೋಕ್ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.