ಕುಶಾಲನಗರ : ದೇಶದ ಅತಿ ದೊಡ್ಡ ಪಕ್ಷವಾದ ಬಿಜೆಪಿ ಒಂದೇ 400 ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿ ಕೂಟ 400 ಕಿಂತಲ್ಲೂ ಹೆಚ್ಚು ಸ್ಥಾನ ಪಡೆಯಲಿದೆ ಸಂಸದ ಸದಾನಂದ ಗೌಡ ಭವಿಷ್ಯ ನುಡಿದರು.
ಇಲ್ಲಿನ ಗೌಡ ಸಮಾಜದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕೇವಲ 200 ಸ್ಥಾನಗಳಿಗೆ ಮಾತ್ರ ಸ್ಪರ್ಧೆ ಮಾಡಿದೆ. ಪ್ರಧಾನಿ ಆಗಬೇಕು ಅಂದ್ರೆ 271 ಕಿಂತ ಹೆಚ್ಚು ಸ್ಥಾನ ಗೆಲ್ಲಬೇಕು. ಆದರೆ 270 ಕ್ಷೇತ್ರದಲ್ಲಿ ಸ್ಪರ್ಧೆ ಮಾಡದ ಕಾಂಗ್ರೆಸ್ 150 ರಿಂದ 180 ಸ್ಥಾನಕ್ಕೆ ಬಿಜೆಪಿ ಕುಸಿಯುತ್ತದೆ ಎಂದು ಹೇಳುತ್ತಿದೆ. ಕಾಂಗ್ರೆಸ್ ನವರು ಆಡಳಿತ ಮಾಡುತ್ತಾರೆ ಅಂದರೆ ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದರು.
ರಾಮನವಿ ವೇಳೆ ರಾಮ ಭಕ್ತರ ಮೇಲಿನ ಹಲ್ಲೆ ಪ್ರಕರಣ ಖಂಡನೀಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಕಾನೂನು ಸುವ್ಯವಸ್ಥೆ ಅದಃಪತನಕ್ಕೆ ಹೋಗುತ್ತೆ. ಭಯೋತ್ಪಾದಕರಿಗೆ, ಕಾನೂನು ಸುವ್ಯವಸ್ಥೆ ಹಾಳು ಮಾಡುವವರಿಗೆ ಕಾಂಗ್ರೆಸ್ ಆಡಳಿತ ಸ್ವರ್ಗವಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ದುರ್ದೈವ ಎಂದು ಟೀಕಿಸಿದರು.
ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ರಂಜನ್ ಮಾತನಾಡಿ, ದೇಶದ ಎಲ್ಲೇಡೆ ಮೋದಿ ಅಲೆ ಇದೆ. ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲಿದ್ದಾರೆ. ಆದ್ದರಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ತಮ್ಮ ಮತವನ್ನು ಹಾಕಬೇಕು ಎಂದು ಮನವಿ ಮಾಡಿದರು.