ಮಡಿಕೇರಿ: ‘ಜಬಾಬ್ದಾರಿಯನ್ನು ನಿಷ್ಠೆಯಿಂದ ಕೈಗೊಂಡು ಬೂತ್ಮಟ್ಟ ದಿಂದ ಪಕ್ಷದ ಬಲವರ್ಧನೆಗೆ ಕಾರ್ಯತಂತ್ರ ರೂಪಿಸಲು ಸಿದ್ಧ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಶಿವು ಮಾದಪ್ಪ ಹೇಳಿದರು.
ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕೊಡಗಿನಲ್ಲಿ ಕಾಂಗ್ರೆಸ್ ಸಂಘಟನೆ ಮಾಡುವ ಅನಿವಾರ್ಯತೆಯಿದೆ. ಪಕ್ಷದಲ್ಲಿರುವ ಭಿನ್ನಮತವನ್ನು ದೂರ ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರ ಸಮಾವೇಶ, ಸಭೆ ನಡೆಸಲಾಗುವುದು; ಗೊಂದಲಗಳನ್ನು ವರಿಷ್ಠರೊಟ್ಟಿಗೆ ಚರ್ಚಿಸಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು’ ಎಂದು ಮಾಹಿತಿ ನೀಡಿದರು.
‘ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವಲ್ಲಿ ಬೂತ್ಮಟ್ಟದಲ್ಲಿ 20ರಿಂದ 25 ಸದಸ್ಯರ ತಂಡದೊಂದಿಗೆ ಪ್ರತಿ ಮನೆಗಳಿಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು’ ಎಂದರು.
ಎರಡು ಶಾಸಕ ಸ್ಥಾನ ಖಚಿತ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ಹಾಗೂ ವಿರಾಜಪೇಟೆದಿಂದ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ. ಜುಲೈ 18ರಂದು ಸೋಮವಾರಪೇಟೆ ಕೊಡವ ಸಮಾಜ ಹಾಗೂ ಮಡಿಕೇರಿಯ ಕೂರ್ಗ್ ಕಮ್ಯುನಿಟಿ ಹಾಲ್ನಲ್ಲಿ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.
₹100 ಕೋಟಿ ಅನುದಾನ: ‘ಉಸ್ತು ವಾರಿ ಸಚಿವ ಎಂ.ಆರ್. ಸೀತಾರಾಂ ಅವರ ಹೋರಾಟದ ಫಲವಾಗಿ ಜಿಲ್ಲೆಗೆ ₹ 100 ಅನುದಾನ ಬಂದಿದೆ. ಈ ಅನುದಾನದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು. ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಪರವಾಗಿದೆ ಎಂಬ ತಪ್ಪು ಕಲ್ಪನೆಯನ್ನು ಬಿತ್ತಲಾಗುತ್ತಿದೆ. ಅದನ್ನು ಹೋಗಲಾಡಿ ಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಹೇಳಿದರು.
ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿಲ್ಲ. ಮೂರನೇ ಹಂತದಲ್ಲಿ ಬಿಡುಗಡೆಯಾದ ವಿಶೇಷ ಅನುದಾನ ಗಳನ್ನು ಕುಗ್ರಾಮಗಳ ಗ್ರಾಮೀಣ ರಸ್ತೆಗಳಿಗೆ ಬಳಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಕೊಡವ ಅಕಾಡೆಮಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಕೆ.ಅಬ್ದುಲ್ ರಜಾಕ್, ಪೊನ್ನಪ್ಪ, ಸುರೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.