ಮಡಿಕೇರಿ: ಮಂಗಳೂರಿನಲ್ಲಿ ನಡೆದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿಶ್ವ ಹಿಂದೂ ಪರಿಷತ್ನ ಕಾರ್ಯದರ್ಶಿ ಡಿ. ನರಸಿಂಹ, ‘ನಿರಂತರ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಸಂಘಟನೆಗಳಾದ ಪಿಎಫ್ಐ, ಎಸ್ಡಿಪಿಐ ಹಾಗೂ ಕೆಡಿಎಫ್ ವಿರುದ್ಧ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ಆಗಬೇಕು.
ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೆಲವು ವರ್ಷಗಳಿಂದ ನಿರಂತರವಾಗಿ ಕೋಮುಗಲಭೆ, ಮತೀಯ ಕೊಲೆಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಮೌನವಾಗಿದೆ. ಇಂತಹ ಸಂಘಟನೆಗಳನ್ನು ಈ ಕೂಡಲೇ ನಿಷೇಧಿಸಬೇಕು’ ಎಂದು ಒತ್ತಾಯಿಸಿದರು.
‘ಕೇರಳ ಮೂಲದ ಸಂಘಟನೆಗಳ ಕಾರ್ಯಕರ್ತರೇ ಆರೋಪಿಗಳಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಯು.ಟಿ.ಖಾದರ್ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಸರ್ಕಾರದ ವೈಫಲ್ಯದಿಂದ ಆರ್ಎಸ್ಎಸ್ ಕಾರ್ಯಕರ್ತರ ಕೊಲೆ ನಿರಂತರವಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.
ಬಜರಂಗದಳದ ತಾಲ್ಲೂಕು ಸಂಚಾಲಕ ಅಜಿತ್ಕುಮಾರ್ ಮಾತನಾಡಿ, ‘ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ವ್ಯವಸ್ಥಿತವಾಗಿ ಹತ್ಯೆ ಮಾಡಿಸುತ್ತಿರುವುದು ನಿರಂತರವಾಗಿ ನಡೆಯುತ್ತಿದೆ. ಗೃಹ ಇಲಾಖೆ, ಇಂತಹ ದುಷ್ಕೃತ್ಯಗಳನ್ನು ತಡೆಯುವಲ್ಲಿ ವಿಫಲವಾಗಿದೆ. ಕಠಿಣ ಕ್ರಮ ಕೈಗೊಳ್ಳದಿದ್ದರೆ ಜನರ ನೆಮ್ಮದಿ ಹಾಳಾಗಲಿದೆ’ ಎಂದು ಎಚ್ಚರಿಸಿದರು.