ಸೋಮವಾರಪೇಟೆ: ಸಮೀಪದ ಬಳಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಛತ್ತೀಸ್ಗಡದಲ್ಲಿ ಫೆ.3 ರಿಂದ ಪ್ರಾರಂಭವಾಗಲಿರುವ 14 ವರ್ಷದೊಳಗಿನ ರಾಷ್ಟ್ರೀಯ ಹಾಕಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ತೆರಳಿದ ಹಿನ್ನೆಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಮತ್ತು ಬೇಳೂರು ಗ್ರಾಮ ಪಂಚಾಯಿತಿ ವತಿಯಿಂದ ಸೋಮವಾರ ಬೀಳ್ಕೊಡಲಾಯಿತು.
ಬಳಗುಂದ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಬೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎನ್.ಬಸವರಾಜು ಮಾತನಾಡಿ, ಮೂಲಭೂತ ಸೌಕರ್ಯಗಳು ಮತ್ತು ಕ್ರೀಡಾ ಸಾಮಗ್ರಿಗಳ ಕೊರತೆಯ ನಡುವೆಯೂ ಕ್ರೀಡಾ ತರಬೇತುದಾರರ ಉತ್ತಮ ಮಾರ್ಗದರ್ಶನದಿಂದಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಸರಕಾರಿ ಶಾಲಾ ಮಕ್ಕಳ ಸಾಧನೆಯನ್ನು ಶ್ಲಾಘಿಸಿದರು.
ಬಹುತೇಕ ಕೂಲಿ ಕಾರ್ಮಿಕರ ಮಕ್ಕಳೇ ತಂಡದಲ್ಲಿದ್ದರೂ ಸತತ ಪರಿಶ್ರಮದಿಂದಾಗಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಸರ್ಕಾರ ಗ್ರಾಮೀಣ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಇನ್ನಷ್ಟು ಸಹಾಯಧನ ಹಾಗೂ ಸೌಲಭ್ಯಗಳನ್ನು ನೀಡಬೇಕೆಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಶಿವಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹೇಶ್ ಹಾಗೂ ಪದಾಧಿಕಾರಿಗಳಾದ ತನಿಯಪ್ಪ, ಲೀನಾ, ಗ್ರಾಮ ಪಂಚಾಯಿತಿ ಸದಸ್ಯರಾದ ಕುಶಾಲಪ್ಪ ಮತ್ತು ಮಂಜುನಾಥ್, ಮುಖ್ಯ ಶಿಕ್ಷಕ ರಾಮಲಿಂಗಪ್ಪ ಹಾಜರಿದ್ದರು.