ಮಡಿಕೇರಿ: ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಶ್ರೀಕಾಂತರಾಜ್ ಅವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ವರದಿ ಘೋಷಣೆಗೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ) ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸಭೆಯಲ್ಲಿ ಸಮಿತಿ ಸಂಚಾಲಕ ಮೋಹನ್ ಮೂಗನಾಡು ಮಾತನಾಡಿ, ‘ಪರಿಶಿಷ್ಟ ಜಾತಿಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿ-ಗತಿ ಅರಿಯಲು ಸಂವಿಧಾನ ಬದ್ಧವಾಗಿ ರಚನೆ ಮಾಡಿದ್ದ ಸದಾಶಿವ ನೇತೃತ್ವದ ಆಯೋಗದ ವರದಿಯನ್ನು ಜಾರಿ ಮಾಡುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿದೆ. ಕೂಡಲೇ ವರದಿ ಘೋಷಣೆ ಮಾಡಬೇಕು’ ಎಂದು ಆಗ್ರಹಿಸಿದರು.
ವರದಿಯನ್ನು ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ಅಧಿವೇಶನದಲ್ಲಿ ಅಂಗೀಕರಿಸಿ ಸಂವಿಧಾನ ತಿದ್ದುಪಡಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ವರದಿ ಘೋಷಣೆಯಾದರೆ ರಾಜ್ಯದ 6 ಕೋಟಿ ಜನಸಂಖ್ಯೆಯ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಗೊತ್ತಾಗಲಿದೆ ಎಂದು ಹೇಳಿದರು.
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಗಾಯತ್ರಿ ನರಸಿಂಹ, ಎಂ.ಎ. ಮನ್ಸೂರ್, ಎಚ್.ಜೆ. ರಾಚಯ್ಯ, ಲಿಂಗರಾಜು, ಜಿಲ್ಲಾ ಖಚಾಂಚಿ ಗಿರೀಶ್ ಪಗಡಿಗತ್ತಲ, ವಿರಾಜಪೇಟೆ ತಾಲ್ಲೂಕು ಸಮಿತಿ ಸಂಚಾಲಕ ಎಚ್.ಇ. ಬಸವರಾಜು, ಸಂಘಟನಾ ಸಂಚಾಲಕರಾದ ಮಹದೇವ, ಅನಿಲ್ಕುಮಾರ್, ಬಿ.ಎಂ. ಭವಿತ್ ಪಾಲ್ಗೊಂಡಿದ್ದರು.