ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಜಿಲ್ಲೆಯಲ್ಲಿ 1,333 ಮಕ್ಕಳು ಅಪೌಷ್ಟಿಕ

Published 27 ಫೆಬ್ರುವರಿ 2024, 5:31 IST
Last Updated 27 ಫೆಬ್ರುವರಿ 2024, 5:31 IST
ಅಕ್ಷರ ಗಾತ್ರ

ಕೋಲಾರ: ಗರ್ಭಾವಸ್ಥೆಯಲ್ಲಿದ್ದಾಗಿನ ಪೌಷ್ಟಿಕ ಆಹಾರದ ಕೊರತೆ, ಅವಧಿಪೂರ್ವ ಜನನ ಸೇರಿದಂತೆ ವಿವಿಧ ಕಾರಣಗಳಿಂದ ಗಡಿ ಜಿಲ್ಲೆಯ ಕೋಲಾರದಲ್ಲಿ 1,333 ಮಕ್ಕಳು ಅಪೌಷ್ಟಿಕಾಂಶದಿಂದ ಬಳಲುತ್ತಿವೆ.

ಆರು ತಾಲ್ಲೂಕುಗಳಿಂದ ಸೇರಿ 109 ಮಕ್ಕಳು ತೀವ್ರ ಅಪೌಷ್ಟಿಕಾಂಶ ಹಾಗೂ 1,224 ಮಕ್ಕಳು ಸಾಧಾರಣ ಅಪೌಷ್ಟಿಕಾಂಶಕ್ಕೆ ಒಳಗಾಗಿರುವುದು ಆತಂಕ ಮೂಡಿಸಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಕಿ ಅಂಶ ಪ್ರಕಾರ 2023ರ ಡಿಸೆಂಬರ್‌ ಅಂತ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು 84,671 ಮಕ್ಕಳನ್ನು ತೂಕ ಮಾಡಲಾಗಿದೆ. ಅವರಲ್ಲಿ ಒಟ್ಟು 1,333 ಮಕ್ಕಳಲ್ಲಿ ಅಪೌಷ್ಟಿಕಾಂಶವಿರುವುದು ಪತ್ತೆಯಾಗಿದೆ. ಒಟ್ಟು ಮಕ್ಕಳ ಪ್ರಮಾಣಕ್ಕೆ ಹೋಲಿಸಿದರೆ ಶೇ 1.57 ಮಕ್ಕಳಲ್ಲಿ ಅಪೌಷ್ಟಿಕಾಂಶವಿದೆ.

ಅಪೌಷ್ಟಿಕತೆ ಹೋಗಲಾಡಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಹಲವಾರು ಯೋಜನೆ ಜಾರಿ ಮಾಡಿವೆ. ಆದರೆ, ಮಕ್ಕಳ ದೈಹಿಕ ಬೆಳವಣಿಗೆ ಮಾತ್ರ ನಿರೀಕ್ಷಿತ ಮಟ್ಟದ ಸುಧಾರಣೆ ಕಾಣುತ್ತಿಲ್ಲ, ಹೆಚ್ಚುತ್ತಿರುವ ಬಾಲ್ಯ ವಿವಾಹ, ಸಾಮಾಜಿಕ, ಆರ್ಥಿಕ ಕಾರಣಗಳಿಗೆ ಜಿಲ್ಲೆಯಲ್ಲಿ ಅಪೌಷ್ಟಿಕತೆ ಸಮಸ್ಯೆ ಇನ್ನೂ ಮುಂದುವರಿದಿರುವುದು ಸವಾಲಾಗಿ ಪರಿಣಮಿಸಿದೆ. ಜಿಲ್ಲಾ ಕೇಂದ್ರವಾಗಿರುವ ಕೋಲಾರ ತಾಲ್ಲೂಕಿನಲ್ಲೇ ಅಪೌಷ್ಟಿಕ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 576 ತೀವ್ರ ಹಾಗೂ ಸಾಧಾರಣ ಅಪೌಷ್ಟಿಕ ಮಕ್ಕಳು ಇರುವುದು ಪತ್ತೆಯಾಗಿದೆ. ಆನಂತರದ ಸ್ಥಾನದಲ್ಲಿ ಶ್ರೀನಿವಾಸಪುರ ತಾಲ್ಲೂಕು ಇದೆ.

‘ಇಲಾಖೆ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಅಪೌಷ್ಟಿಕ ಮಕ್ಕಳ ಮೇಲೆ ನಿಗಾ ಇಟ್ಟಿದ್ದಾರೆ. ಜಿಲ್ಲೆಯಲ್ಲಿ ವಿಶೇಷವಾಗಿ ಪ್ರತಿ ತಾಲ್ಲೂಕಿಗೆ ಒಬ್ಬರಂತೆ ನೋಡಲ್‌ ಅಧಿಕಾರಿ ನೇಮಿಸಲಾಗಿದೆ. ಅಂಗನವಾಡಿಯಲ್ಲಿ ಮಕ್ಕಳನ್ನು ತೂಕ ಮಾಡಲಾಗುತ್ತಿದೆ. ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ ಮಾಡುತ್ತಿದ್ದೇವೆ’ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

ಜಿಲ್ಲೆಯಲ್ಲಿ ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ಗುರುತಿಸಿ ನಿಯಂತ್ರಿಸಲು ಸಮುದಾಯ ಆರೋಗ್ಯಾಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ವಯಸ್ಸಿಗೆ ತಕ್ಕ ತೂಕ, ಎತ್ತರಕ್ಕೆ ತಕ್ಕ ತೂಕ, ತೋಳಿನ ಸುತ್ತಳತೆ ಮೂಲಕ ಮಕ್ಕಳ ಅಪೌಷ್ಟಿಕತೆಯನ್ನು ಗುರುತಿಸಲಾಗುತ್ತದೆ. ತೀವ್ರ ಅಪೌಷ್ಟಿಕತೆಯಿಂದ 5 ವರ್ಷದೊಳಗಿನ ಮಕ್ಕಳು ಮರಣ ಹೊಂದುವ ಸಾಧ್ಯತೆ ಇರುತ್ತದೆ. ಕೋವಿಡ್‌ ಬಳಿಕ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗಿದೆ.

ಸರ್ಕಾರ ಈಗ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1 ರಿಂದ 10 ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ರಾಗಿ ಮಾಲ್ಟ್‌ ಹಾಲಿನ ಮಿಶ್ರಣವನ್ನು ವಿತರಿಸುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಶಾಲಾ ಮಕ್ಕಳಿಗೆ ಬಿಸಿಯೂಟ, ಕೆನೆಭರಿತ ಹಾಲು, ಮೊಟ್ಟೆ, ಬಾಳೆ ಹಣ್ಣು, ಶೇಂಗಾ, ಚಿಕ್ಕಿ ವಿತರಿಸುತ್ತಿದೆ. ಹಾಗೆಯೇ, ಅಂಗನವಾಡಿ ಮಕ್ಕಳಿಗೂ ಪೌಷ್ಟಿಕ ಆಹಾರ ನೀಡಲಾಗುತ್ತಿದೆ.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಪತ್ತೆ ಕಾರ್ಯ ನಿರಂತವಾಗಿ ನಡೆಯುತ್ತಿದೆ. ಅಪೌಷ್ಟಿಕತೆ ಇರುವುದು ಗೊತ್ತಾಗುತ್ತಿದ್ದಂತೆ ಆರೈಕೆ ಮಾಡಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ
ನಾರಾಯಣಸ್ವಾಮಿ, ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT