ಶ್ರೀನಿವಾಸಪುರ: ಪಟ್ಟಣಕ್ಕೆ ಡಿ.30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೆಟಿ ನೀಡಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆತ್ಮೀಯವಾಗಿ ಸ್ವಾಗತಿಸಬೇಕು ಎಂದು ಸಚಿವ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ಹೊರ ವಲಯದಲ್ಲಿನ ರಾಜಧಾನಿ ಮಾವಿನ ಮಂಡಿಯಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ
ಮಾತನಾಡಿದರು.
ಈ ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದಕ್ಕೆ ಕಾರಣರಾದ ಮುಖ್ಯಮಂತ್ರಿಯವರು ಕೃತಜ್ಞತಾ ಭಾವದಿಂದ ಗೌರವಪೂರ್ವಕವಾಗಿ ಸ್ವಾಗತಿ ಸುವುದು ಕ್ಷೇತ್ರದ ಜನರ ಕರ್ತವ್ಯವಾಗಿದೆ ಎಂದರು.
ತಾಲ್ಲೂಕಿನ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹ 1250 ಕೋಟಿ ಬಿಡುಗಡೆ ಮಾಡಿದ್ದಾರೆ. 18,500 ಮನೆ ಮಂಜೂರು ಮಾಡಿದ್ದಾರೆ. ಸ್ತ್ರೀ ಶಕ್ತಿ ಸಂಘಗಳ 43,000 ಸಾವಿರ ಫಲಾನುಭವಿಗಳಿಗೆ ಡಿಸಿಸಿ ಬ್ಯಾಂಕ್ ವತಿಯಿಂದ ₹ 200 ಕೋಟಿ ಬಡ್ಡಿರಹಿತ ಸಾಲ ನೀಡಲಾಗಿದೆ ಎಂದು
ಹೇಳಿದರು.
ಕೋಲಾರದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಕ್ಯಾನ್ಸರ್ ಆಸ್ಪತ್ರೆ ಕಟ್ಟಡಕ್ಕೆ ಸಂಬಂಧಿಸಿದಂತೆ ಟಾಟಾ ಟ್ರಸ್ಟ್ ಅಧ್ಯಕ್ಷರು ಮುಖ್ಯ ಮಂತ್ರಿಗಳ ಸಮಕ್ಷಮ ಸಹಿ ಹಾಕುವರು. ಈ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರ ಚಿಕಿತ್ಸೆ ಸೌಲಭ್ಯ ಇರುತ್ತದೆ. ಜಿಲ್ಲೆಯಲ್ಲಿ ನಿರ್ಮಿಸಲಾಗುತ್ತಿರುವ ಎರಡೂ ಆಸ್ಪತ್ರೆಗಳಿಗೆ ₹ 1 ಸಾವಿರ ಕೋಟಿ ಖರ್ಚಾಗಲಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ವೆಂಕಟಮುನಿಯಪ್ಪ, ರಾಜ್ಯ ಮಾವು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಕೋಚಿಮುಲ್ ಅಧ್ಯಕ್ಷ ಎನ್.ಜಿ.ಬ್ಯಾಟಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ, ಪಟ್ಟಣ ಆರ್ಯವೈಶ್ಯ ಮಂಡಳಿ ಟ್ರಸ್ಟ್ ಅಧ್ಯಕ್ಷ ವೈ.ಆರ್.ಶಿವಪ್ರಕಾಶ್, ಕಾಂಗ್ರೆಸ್ ಮುಖಂಡ ಬಿ.ವೆಂಕಟರೆಡ್ಡಿ, ಪುರಸಭಾ ಸದಸ್ಯ ಬಿ.ಎಂ.ಪ್ರಕಾಶ್, ಕಂಠೀರವ ಸ್ಟುಡಿಯೋ ನಿರ್ದೇಶಕ ರಾಜೇಂದ್ರ ಪ್ರಸಾದ್ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಮ್ಯಾಕಲ ನಾರಾಯಣಸ್ವಾಮಿ, ರಾಜ್ಯ ತೆಂಗಿನ ನಾರು ಅಭಿವೃದ್ಧಿ ಮಂಡಳಿ ನಿರ್ದೇಶಕ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಅಕ್ಬರ್ ಷರೀಫ್, ಮುಖಂಡರಾದ ಮಾರುತಿರೆಡ್ಡಿ, ಯಮನೂರು ನಾಗರಾಜ್, ಕೆ.ಕೆ.ಮಂಜು, ಕೆ.ವಿಸೂರ್ಯನಾರಾಯಣಶೆಟ್ಟಿ, ಆರ್.ಎನ್.ಚಂದ್ರಶೇಖರ್, ರಾಮಾಂಜಮ್ಮ, ಗೌರಮ್ಮ ಇದ್ದರು.
ಆಂಧ್ರ ಪ್ರದೇಶದ ಜನರಿಗೂ ಪ್ರಯೋಜನ
ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದ ಸಮೀಪ ₹ 450 ಕೋಟಿ ವೆಚ್ಚದಲ್ಲಿ 300 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸುವರು ಸಚಿವ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಈ ಆಸ್ಪತ್ರೆ ನಿರ್ಮಾಣದಿಂದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಮಾತ್ರವಲ್ಲದೆ, ನೆರೆಯ ಆಂಧ್ರ ಪ್ರದೇಶದ ಗ್ರಾಮಗಳ ನಾಗರಿಕರಿಗೂ ಹೆಚ್ಚಿನ ಪ್ರಯೋಜನವಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.