ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ಭಾನುವಾರ ಒಂದೇ ದಿನ 8 ಮಂದಿ ಕೊನೆಯುಸಿರೆಳೆದಿದ್ದಾರೆ.
ಜಿಲ್ಲೆಯಲ್ಲಿ ಮೇ 12ರಂದು ಮೊದಲ ಬಾರಿಗೆ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದವು. ಆ ನಂತರ ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಮೃತಪಟ್ಟಿರಲಿಲ್ಲ. ಕಳೆದೊಂದು ವಾರದಿಂದ ಸೋಂಕಿತರ ಸಾವಿನ ಪ್ರಮಾಣ ಇಳಿಕೆಯಾಗಿತ್ತು. ಇದೀಗ ಸಾವಿನ ಪ್ರಮಾಣ ಏಕಾಏಕಿ ಏರಿಕೆಯಾಗಿರುವುದು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆಜಿಎಫ್ ಮತ್ತು ಬಂಗಾರಪೇಟೆ ತಾಲ್ಲೂಕಿನಲ್ಲಿ ತಲಾ 3 ಮಂದಿ, ಕೋಲಾರ ಮತ್ತು ಮಾಲೂರು ತಲಾ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 44ಕ್ಕೆ ಹೆಚ್ಚಳವಾಗಿದೆ.
ಇದರ ಬೆನ್ನಲ್ಲೇ ಸೋಂಕಿತರ ಸಂಖ್ಯೆಯಲ್ಲೂ ಗಣನೀಯವಾಗಿ ಏರಿಕೆಯಾಗಿದ್ದು, ಒಟ್ಟಾರೆ ಸಕ್ರಿಯ ಸೋಂಕಿತರ ಸಂಖ್ಯೆ 972ಕ್ಕೆ ಜಿಗಿದಿದೆ. ಜಿಲ್ಲೆಗೆ ಸೋಂಕಿತರ ಸಂಪರ್ಕವು ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಹೊಸದಾಗಿ ಪತ್ತೆಯಾಗಿರುವ 87 ಮಂದಿ ಸೋಂಕಿತರಲ್ಲಿ 33 ಮಂದಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ಹರಡಿದೆ. ಮತ್ತೊಂದೆಡೆ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 48 ಮಂದಿಗೆ ಸೋಂಕು ತಗುಲಿದೆ.
ಕೋಲಾರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 15 ಮಂದಿಗೆ, ಸೋಂಕಿತರ ಸಂಪರ್ಕದಿಂದ 10 ಮಂದಿಗೆ, ಹೊರ ಜಿಲ್ಲೆಗೆ ಹೋಗಿ ಬಂದಿದ್ದ 3 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳುತ್ತಿರುವ ಒಬ್ಬರಿಗೆ ಸೋಂಕು ಬಂದಿದೆ.
ಮಾಲೂರು ತಾಲ್ಲೂಕಿನಲ್ಲಿ ಸೋಂಕಿತರ ಸಂಪರ್ಕದಿಂದ 9 ಮಂದಿಗೆ ಮತ್ತು ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ ಒಬ್ಬರಿಗೆ ಸೋಂಕು ಹರಡಿದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ ಹಾಗೂ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 4 ಮಂದಿಗೆ ಸೋಂಕು ತಗುಲಿದೆ.
ಮುಳಬಾಗಿಲು ತಾಲ್ಲೂಕಿನಲ್ಲಿ 6 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಹಾಗೂ ವಿಷಮ ಶೀತ ಜ್ವರವಿರುವ 4 ಮಂದಿಗೆ ಸೋಂಕು ಬಂದಿದೆ.
ಕೆಜಿಎಫ್ನಲ್ಲಿ ಹೆಚ್ಚು: ಕೆಜಿಎಫ್ ತಾಲ್ಲೂಕಿನಲ್ಲಿ ಅತಿ ಹೆಚ್ಚು 31 ಮಂದಿಗೆ ಸೋಂಕು ಹರಡಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವ 18 ಮಂದಿ, ಸೋಂಕಿತರ ಸಂಪರ್ಕದಿಂದ 11 ಮಂದಿ, ಹೊರ ರಾಜ್ಯಕ್ಕೆ ಹೋಗಿದ್ದ ಒಬ್ಬರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.
ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಭಾನುವಾರ ಮನೆಗೆ ಮರಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.