ಕೋಲಾರ: ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುವ ಫೆ.13 ರ ಕಾರ್ಯಕ್ರಮಕ್ಕೆ ಮಹಿಳೆಯರಿಗೆ ಸಾಲ ಕೊಡುವ ನೆಪದಲ್ಲಿ ಡಿಸಿಸಿ ಬ್ಯಾಂಕ್ ಅಧಿಕಾರಿಗಳನ್ನು ಕಾಂಗ್ರೆಸ್ ದುರುಪಯೋಗಪಡಿಸಿಕೊಳ್ಳುತ್ತಿದೆ. ಇದನ್ನು ನಾನು ಒಬ್ಬ ಜನಪ್ರತಿನಿಧಿಯಾಗಿ ಖಂಡಿಸುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಜೆಡಿಎಸ್ನ ಇಂಚರ ಗೋವಿಂದರಾಜು ಹೇಳಿದರು.
‘ಸಹಕಾರಿ ಇಲಾಖೆಯ ಡಿಸಿಸಿ ಬ್ಯಾಂಕ್ ಅನ್ನು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಚುನಾವಣೆಗಾಗಿಯೇ ಸಾಲವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ’ ಎಂದು ಅವರು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
‘ಜಿಲ್ಲೆಯಲ್ಲಿ ಮೂರು ಪಕ್ಷಗಳ ಜನಪ್ರತಿನಿಧಿಗಳಿದ್ದರೂ ಶಿಷ್ಟಾಚಾರ ಉಲ್ಲಂಘನೆ ಮಾಡಿ ಡಿಸಿಸಿ ಬ್ಯಾಂಕ್ ಸಾಲ ವಿತರಣೆಯಲ್ಲಿ ಕಾಂಗ್ರೆಸ್ ಶಾಸಕರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಬ್ಯಾಂಕ್ ಎನ್ನುವ ರೀತಿ ವರ್ತಿಸುತ್ತಿದ್ದಾರೆ’ ಎಂದು ದೂರಿದರು.
‘ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸಮಾವೇಶ ಮಾಡಲಿ ಯಾರು ವಿರೋಧಿಸುವುದಿಲ್ಲ. ಅದನ್ನು ಬಿಟ್ಟು ಸ್ತ್ರೀಶಕ್ತಿ ಸಂಘಗಳಿಗೆ ಸಾಲ ಕೊಡುವ ನೆಪದಲ್ಲಿ ದುರ್ಬಳಕೆ ಮಾಡಿಕೊಂಡರೇ ಹೇಗೆ? ಡಿಸಿಸಿ ಬ್ಯಾಂಕ್ ಕಾಂಗ್ರೆಸ್ ಶಾಸಕರ ಪರವಾಗಿ ಕೆಲಸ ಮಾಡುತ್ತಿದೆ. ಈ ಬಗ್ಗೆ ಸದನದಲ್ಲಿ ಕೂಡ ಧ್ವನಿ ಎತ್ತಿದ್ದೇನೆ. ಇದರಲ್ಲಿ ಬಿಜೆಪಿಯವರು ಕೂಡ ಶಾಮೀಲಾಗಿರುವಂತೆ ಕಾಣಿಸುತ್ತಿದೆ. ಅವರದೇ ಸರ್ಕಾರ ಇದ್ದರೂ ಧ್ವನಿ ಎತ್ತುತ್ತಿಲ್ಲ’ ಎಂದರು.
‘ಸಾಲ ಕೊಟ್ಟಿರುವುದಕ್ಕೆ ಅಭ್ಯಂತರ ಇಲ್ಲ. ಆದರೆ, ಎಲ್ಲಾ ಶಾಸಕರನ್ನು ಕರೆಸಿ ಕಾರ್ಯಕ್ರಮ ನಡೆಸಬೇಕು’ ಎಂದು ಸಲಹೆ ನೀಡಿದರು.
ನಿಖಿಲ್ ಭೇಟಿ ನಾಳೆ: ‘ಜೆಡಿಎಸ್ ಪಕ್ಷದಿಂದ ಮನೆಮನೆಗೆ ಕುಮಾರಣ್ಣ ಕಾರ್ಯಕ್ರಮವನ್ನು ಕೋಲಾರ ಗ್ರಾಮೀಣ ಭಾಗದಲ್ಲಿ ಆಯೋಜನೆ ಮಾಡುತ್ತಿದ್ದೇವೆ. ಫೆ.12 ರಂದು ಸೀತಿ ಗ್ರಾಮ ಪಂಚಾಯಿತಿಯ ತಿಪ್ಪೇನಹಳ್ಳಿಯಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಇಂಚರ ಗೋವಿಂದರಾಜು ಪಾಲ್ಗೊಳ್ಳುತ್ತಾರೆ’ ಎಂದು ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ಚನ್ನಯ್ಯ, ಮುಖಂಡರಾದ ಬಣಕನಹಳ್ಳಿ ನಟರಾಜ್, ಅಶೋಕ್, ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ಶಶಿಧರ್, ಸುಬ್ರಮಣಿ ಇದ್ದರು.