ಶ್ರೀನಿವಾಸಪುರ: ‘ಶಿಕ್ಷಕರು ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಬೇಕು. ಮಾನವೀಯ ಮೌಲ್ಯಗಳ ಮಹತ್ವ ತಿಳಿಸಬೇಕು’ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್.ಎನ್. ಚಂದ್ರಶೇಖರ್ ಹೇಳಿದರು.
ತಾಲ್ಲೂಕಿನ ರೋಣೂರು ಗ್ರಾಮದಲ್ಲಿ ಭಾರತ ಸೇವಾದಳದಿಂದ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ ಹಾಗೂ ಕೊರೊನಾ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಸೇವಾದಳ ಅತ್ಯಂತ ಶಿಸ್ತಿನ ಸಂಸ್ಥೆಯಾಗಿದೆ. ಅದು ಸೇವೆಯಲ್ಲಿ ಸಾರ್ಥಕತೆ ಕಂಡುಕೊಳ್ಳುವ ಸಂಸ್ಥೆ. ಎಲ್ಲಾ ಕಾಲದಲ್ಲೂ ಈ ಸಂಸ್ಥೆ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಮಾಜದ ಗೌರವಕ್ಕೆ ಪಾತ್ರವಾಗಿದೆ. ಶಿಕ್ಷಕರು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳನ್ನು ಈ ಸಂಸ್ಥೆಗೆ ಸೇರಿಸಿಕೊಳ್ಳಬೇಕು. ಅವರಲ್ಲಿ ದೇಶ ಪ್ರೇಮ ಹಾಗೂ ಸೇವಾಪರತೆ ಬಿತ್ತಬೇಕು ಎಂದು ಹೇಳಿದರು.
ಭಾರತ ಸೇವಾದಳದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಆರ್. ರವಿಕುಮಾರ್ ಮಾತನಾಡಿ, ಶಿಕ್ಷಕರಿಗೆ ಅಗತ್ಯ ತರಬೇತಿ ನೀಡುವುದಕ್ಕಾಗಿ ಈ ಕಾರ್ಯಾಗಾರ ಏರ್ಪಡಿಸಲಾಗಿದೆ. ಶಿಕ್ಷಕರು ಸಕ್ರಿಯವಾಗಿ ಭಾಗವಹಿಸಿ ತರಬೇತಿ ಪಡೆಯಬೇಕು. ತಾವು ಪಡೆದ ತರಬೇತಿ ಮಕ್ಕಳಿಗೆ ವರ್ಗಾವಣೆ ಆಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ. ನಾಗರಾಜ್, ಪದಾಧಿಕಾರಿಗಳಾದ ಜಿ.ಎನ್. ಚನ್ನಪ್ಪ, ಎಸ್.ಎನ್. ನಂದಿನಿ, ಎನ್. ವೆಂಕಟಸ್ವಾಮಿ, ಸಿಆರ್ಪಿ ನಟರಾಜ್, ಸಂಘಟನಾ ಕಾರ್ಯದರ್ಶಿ ಎನ್. ಮಾಧವಿ, ಎಚ್.ಆರ್. ಅಶೋಕ್ ಕುಮಾರ್, ಶಾರದಾ, ದಾನೇಶ್ ಹಾಜರಿದ್ದರು.