ಬಂಗಾರಪೇಟೆ: ತಾಲ್ಲೂಕಿನಲ್ಲಿ ಈಚೆಗೆ ಸುರಿದ ಆಲಿಕಲ್ಲು ಮಳೆಯಿಂದ ನಷ್ಟವಾಗಿರುವ ಪ್ರತಿ ಎಕರೆಗೆ ₹1 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರೈತ ಸಂಘದ ಸದಸ್ಯರು ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರಿಗೆ ಮನವಿ ಸಲ್ಲಿಸಿದರು.
ಕೊರೊನಾ ಭೀತಿಯಿಂದ ವಿಶ್ವವೇ ತತ್ತರಿಸಿಹೋಗಿದೆ. ಆರ್ಥಿಕ ವ್ಯವಸ್ಥೆ ಕುಸಿದಿದ್ದು, ಕಾರ್ಮಿಕರು ಕೆಲಸ ಕಳೆದು ಕೊಳ್ಳುವಂತಾಗಿದೆ. ಮತ್ತೊಂದೆಡೆ ಮಾರುಕಟ್ಟೆ ಇಲ್ಲದೆ ಬೆಳೆಗಳಿಗೆ ಬೆಲೆ ಸಿಗುತ್ತಿಲ್ಲ. ಸ್ವಾಭಿಮಾನದ ರೈತರು ತಮ್ಮ ಸ್ಥಿತಿಗತಿ ಹೇಳಿಕೊಳ್ಳಲಾರದೆ ಕೊರಗುತ್ತಿದ್ದಾರೆ ಎಂದರು.
ಕ್ಯಾಪ್ಸಿಕಂ, ಟೊಮೆಟೊ, ಹೂಕೋಸು ಮತ್ತಿತರರ ವಾಣಿಜ್ಯ ಬೆಳೆಗಳಿಗೆ ಹಾಕಿದ ಬಂಡವಾಳ ಕೂಡ ಸಿಗುತ್ತಿಲ್ಲ. ಬೆಳೆ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರಾಜ್ಯ ಘಟಕ ಉಪಾಧ್ಯಕ್ಷ ನಾರಾಯಣಗೌಡ ಹೇಳಿದರು.
ಜಿಲ್ಲಾ ಘಟಕದ ಅಧ್ಯಕ್ಷ ಮರಗಲ್ ಶ್ರೀನಿವಾಸ್ ಮಾತನಾಡಿ, ಆಲಿಕಲ್ಲು ಮಳೆಯಿಂದಾಗಿ ತಾಲ್ಲೂಕಿನಲ್ಲಿ ಸಾವಿರಾರು ಎಕರೆಯಲ್ಲಿ ಬೆಳೆದ ವಾಣಿಜ್ಯ ಬೆಳೆಗಳು ನಾಶವಾಗಿವೆ. ಕೂಡಲೇ ಸಮೀಕ್ಷೆ ನಡೆಸಿ, ರೈತರಿಗೆ ನಷ್ಟ ಪರಿಹಾರ ನೀಡಬೇಕು ಎಂದು ತಹಶೀಲ್ದಾರನ್ನು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರು ಮನವಿಯನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ತಿಳಿಸಿದರು. ಐತಾಂಡಹಳ್ಳಿ ಅಂಬರೀಷ್ ಇದ್ದರು.