ಸಿದ್ದರಾಮಯ್ಯ ಸ್ಪರ್ಧಿಸಲಿರುವ ಕೋಲಾರ ಕ್ಷೇತ್ರ ಪರಿಶೀಲನೆಗೆ ಪುತ್ರ ಡಾ.ಯತೀಂದ್ರ

ಕೋಲಾರ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುವುದಾಗಿ ಘೋಷಿಸಿರುವ ಕೋಲಾರ ವಿಧಾನಸಭಾ ಕ್ಷೇತ್ರದ ಸ್ಥಿತಿಗತಿ ತಿಳಿಯಲು ಅವರ ಪುತ್ರ ಹಾಗೂ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸೋಮವಾರ ನಗರಕ್ಕೆ ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ಕೋಲಾರಮ್ಮ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಸಿದ್ದರಾಮಯ್ಯ ಅವರ ವಾಸ್ತವ್ಯಕ್ಕೆ ಹುಡುಕಿರುವ ಮನೆ ವೀಕ್ಷಿಸಲಿದ್ದಾರೆ. ಆನಂತರ ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕ್ಲಾಕ್ ಟವರ್ ವೃತ್ತದಲ್ಲಿರುವ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ. ಆ ಬಳಿಕ ಅಜಾದ್ ನಗರದಲ್ಲಿರುವ ಎನ್ .ಎಸ್ ಕನ್ವೇಷನ್ ಹಾಲ್ನಲ್ಲಿ ಅಲ್ಪಸಂಖ್ಯಾತರ ಮುಖಂಡರ ಸಭೆ ನಡೆಸಲಿದ್ದಾರೆ.
ಈಗಾಗಲೇ ಸಿದ್ದರಾಮಯ್ಯ ಮೂರು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಹೋಗಿದ್ದಾರೆ. ಅದರ ಬೆನ್ನಲ್ಲೇ, ಡಾ.ಯತೀಂದ್ರ ಭೇಟಿ ನೀಡುತ್ತಿರುವುದು ಕುತೂಹಲ ಮೂಡಿಸಿದೆ. ಕ್ಷೇತ್ರದಲ್ಲಿ ವಾತಾವರಣ ಹೇಗಿದೆ ಎಂಬುದನ್ನು ಪರಿಶೀಲಿಸಲು, ಜನರ ಮನಸ್ಥಿತಿ ಅರಿಯಲು ಈ ಭೇಟಿ ಎಂಬುದು ಸ್ಪಷ್ಟವಾಗಿದೆ.
ತಂದೆಯ ಸ್ಪರ್ಧೆ ವಿಚಾರವಾಗಿ ಹಲವಾರು ಸಭೆಗಳಲ್ಲಿ ಮಾತನಾಡಿರುವ ಡಾ.ಯತೀಂದ್ರ, ‘ವರುಣಾದಲ್ಲೇ ಅಪ್ಪ ಸ್ಪರ್ಧಿಸಬೇಕು ಎಂಬುದು ನನ್ನ ಆಸೆ’ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಹಲವರು ‘ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸುವುದಿಲ್ಲ. ಇಲ್ಲಿ ಅಭ್ಯರ್ಥಿಯಾದರೆ ಸೋಲು ಖಚಿತ. ಕೊನೆಗೆ ಕಣಕ್ಕಿಳಿಯುವುದು ವರುಣಾದಲ್ಲಿ’ ಎಂದೆಲ್ಲಾ ಹೇಳುತ್ತಿದ್ದಾರೆ.
ಈ ಹಂತದಲ್ಲಿ ಭೇಟಿ ನೀಡುತ್ತಿರುವ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ನೇತೃತ್ವದಲ್ಲಿ ಸ್ಥಳೀಯ ಮುಖಂಡರು ಸಿದ್ಧತೆ ನಡೆಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.